ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಐದು ಕಡೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಐದು ಕಡೆ ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಏಕಾ-ಏಕಿ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ನಡೆಸಲಾಗಿದೆ. ಚೆನ್ನೈನ ಮೂರು ಕಡೆ ಕೂಡ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ ಶಂಕಿತರ ಕುರಿತು ಪರಿಶೀಲನೆ ನಡೆಸಿದೆ. ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆಯೇ ಮೂರು ನಗರಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ವೈಟ್ಫಿಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಐದು ಜನ ಗಾಯಗೊಂಡಿದ್ದರು. ಆರಂಭದಲ್ಲಿ ಪ್ರಕರಣದ ತನಿಖೆಯ ಹೊಣೆಯನ್ನು ಸಿಸಿಬಿ ಪೊಲೀಸರು ವಹಿಸಿದ್ದರು. ನಂತರ ಈ ಪ್ರಕರಣವನ್ನು ಎನ್ ಐಎಗೆ ವಹಿಸಲಾಗಿದೆ.