ನವದೆಹಲಿ: ಅಬಕಾರಿ ನೀತಿಯಡಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಕೇಜ್ರಿವಾಲ್ರನ್ನು ನಾಳೆ ಕೋರ್ಟ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಅರವಿಂದ ಕೇಜ್ರಿವಾಲ್ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಕೇಜ್ರಿವಾಲ್ ಇಡಿ ನೀಡಿರುವ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಬಲವಂತದ ಕ್ರಮ ತೆಗೆದುಕೊಳ್ಳದಂತೆ EDಗೆ ನಿರ್ದೇಶನ ನೀಡುವಂತೆ ಅವರು ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ, ಈ ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಡಿ ಸಲ್ಲಿಸಿರುವ ಚಾರ್ಜ್ ಶೀಟ್ಗಳಲ್ಲಿ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿತ್ತು. ಅಬಕಾರಿ ನೀತಿಯನ್ನು ರೂಪಿಸಲು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು. ಇದರಿಂದಾಗಿ ಅವರಿಗೆ ಅನಪೇಕ್ಷಿತ ಲಾಭಗಳು ಉಂಟಾಗಿವೆ.ಎಎಪಿಗೆ ಕಿಕ್ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಹೀಗಾಗಿ ಹಲವು ಬಾರಿ ಕೇಜ್ರಿವಾಲ್ ಗೆ ಸಮನ್ಸ್ ನೀಡಿದರೂ ಅವರು ಹಾಜರಾಗಿರಲಿಲ್ಲ. ಹೀಗಾಗಿ ಈಗ ಕೋರ್ಟ್ ನಲ್ಲಿ ಕೇಜ್ರಿವಾಲ್ ಅರ್ಜಿ ವಜಾ ಬೆನ್ನಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ, ನಿವಾಸದಲ್ಲಿ ಶೋಧ ಕಾರ್ಯ ಕೂಡನ ನಡೆದಿದೆ. ಇಡಿ ಅಧಿಕಾರಿಗಳಿಂದ ಕೇಜ್ರಿವಾಲ್ ವಿಚಾರಣೆ ನಡೆದಿದ್ದು, ಹೇಳಿಕೆ ದಾಖಲಿಸಿಕೊಳ್ಳಳಾಗಿದೆ. ಸುದ್ದಿ ಕೇಳುತ್ತಿದ್ದಂತೆ ಅವರ ನಿವಾಸದತ್ತ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.