ಬೆಂಗಳೂರು, ಜು.13 : ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿ, ಕುರುಬರಹಳ್ಳಿ ಗ್ರಾಮದ ಸರ್ವೆ ನಂ.158ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಸುಮಾರು 100 ಕೋಟಿ ಮೌಲ್ಯದ 10.20 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಪೋಡಿ ಮಾಡಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಖಾತೆ ಮಾಡಿಕೊಟ್ಟಿರುವ ಆರೋಪದಡಿ ಹಲವು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ, ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್.ಆರ್. ರಮೇಶ್ ಅವರು ದೂರು ಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಮೂಲತಃ 130.29 ಎಕರೆ ಸರ್ಕಾರಿ ಗೋಮಾಳವಾಗಿರುವ ಸರ್ವೆ ನಂ.158ನ್ನು ಅಕ್ರಮವಾಗಿ ಸರ್ವೆ ನಂ.233ರಿಂದ 239ರವರೆಗೆ ವಿಭಜಿಸಲಾಗಿದೆ ಎಂದು ಆರೋಪಿಸಿದ್ದಾರೆ. ಸರ್ವೆ ನಂ.233ರಿಂದ 236ರವರೆಗೆ ಒಟ್ಟು 8 ಎಕರೆ ಜಮೀನಿಗೆ ನಕಲಿ ಮಂಜೂರಾತಿ (ಗ್ರಾಂಟ್) ದಾಖಲೆಗಳನ್ನು ಸೃಷ್ಟಿಸಿ ಬಳಿಕ ಅದನ್ನು ರಾಧಾ ಬಾಲಕೃಷ್ಣ ಅವರ ಹೆಸರಿಗೆ ನೋಂದಣಿ ಮಾಡಲಾಗಿದೆ. ನಂತರ ಉಳಿದ 2.20 ಎಕರೆ ಸೇರಿ ಒಟ್ಟು 10.20 ಎಕರೆ ಸರ್ಕಾರಿ ಭೂಮಿಯನ್ನು ಕಾನೂನುಬಾಹಿರವಾಗಿ ಪೋಡಿ ಮಾಡಿ ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಹೆಸರಿಗೆ ಖಾತೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕ್ರಿಯೆಯಲ್ಲಿ ಭೂ ದಾಖಲೆ ಇಲಾಖೆ, ತಹಸೀಲ್ದಾರ್ ಕಚೇರಿ, ರಾಜಸ್ವ ಇಲಾಖೆ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಮಟ್ಟದಲ್ಲಿ ಅಧಿಕಾರ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಮತ್ತು ನಿಯಮ ಉಲ್ಲಂಘನೆ ನಡೆದಿದೆ ಎಂದು ಎನ್.ಆರ್ ರಮೇಶ್ ಆರೋಪಿಸಿದ್ದಾರೆ.

ಹಾಗೆಯೇ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ನಿಯಮಗಳ ಪ್ರಕಾರ ಗ್ರಾಂಟ್ ಜಮೀನಿನ ಮಾರಾಟ ಹಾಗೂ ಬಿಬಿಎಂಪಿ ಗಡಿ ವ್ಯಾಪ್ತಿಯೊಳಗಿನ ಸರ್ಕಾರಿ ಭೂಮಿ ಮಂಜೂರಾತಿಗೆ ಇರುವ ನಿರ್ಬಂಧಗಳನ್ನು ಉಲ್ಲಂಘಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಅಧಿಕಾರ ದುರುಪಯೋಗ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ದಾಖಲೆಗಳೊಂದಿಗೆ ಎನ್.ಆರ್ ರಮೇಶ್ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ : ‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ



















