ಉತ್ತರಾಖಂಡ ಕ್ರಿಕೆಟ್ ಸಂಸ್ಥೆಯು (CAU) ಆಟಗಾರರಿಗೆ ಬಾಳೆಹಣ್ಣು ಖರೀದಿಸಲು ಬರೋಬ್ಬರಿ 35 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂಬ ಆಘಾತಕಾರಿ ಆರೋಪ ಕೇಳಿಬಂದಿದೆ. ಸಂಸ್ಥೆಯು ಸರ್ಕಾರಿ ನಿಧಿಯಿಂದ 12 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಉತ್ತರಾಖಂಡ ಹೈಕೋರ್ಟ್, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ನೋಟಿಸ್ ಜಾರಿ ಮಾಡಿದೆ.
ಸಂಜಯ್ ರಾವತ್ ಮತ್ತು ಅವರ ಸಹಚರರು, ಉತ್ತರಾಖಂಡ ಕ್ರಿಕೆಟ್ ಸಂಸ್ಥೆಯ 2024-25ನೇ ಹಣಕಾಸು ವರ್ಷದ ಲೆಕ್ಕಪರಿಶೋಧನಾ ವರದಿಯನ್ನು ಆಧರಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಕೆಟ್ ಸಂಸ್ಥೆಯ ಲೆಕ್ಕಪತ್ರ ವರದಿಯಲ್ಲಿನ ಖರ್ಚು-ವೆಚ್ಚಗಳನ್ನು ಕಂಡು ತಾವು ಆಘಾತಕ್ಕೊಳಗಾಗಿದ್ದೇವೆ ಎಂದು ಅರ್ಜಿದಾರರು ತಿಳಿಸಿದ್ದಾರೆ. ಪಂದ್ಯಾವಳಿಗಳನ್ನು ಆಯೋಜಿಸಲು ಸರ್ಕಾರದಿಂದ ನೀಡಲಾಗಿದ್ದ 12 ಕೋಟಿ ರೂಪಾಯಿ ಅನುದಾನದಲ್ಲಿ, ಕೇವಲ ಬಾಳೆಹಣ್ಣುಗಳನ್ನು ಖರೀದಿಸಲು 35 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ವರದಿಯಲ್ಲಿದೆ. ಆದ್ದರಿಂದ, ರಾಜ್ಯ ಕ್ರಿಕೆಟ್ ಮಂಡಳಿಯ ಲೆಕ್ಕಪತ್ರ ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
“ಕ್ರಿಕೆಟ್ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಕೆಲವರು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ಆಹಾರ ವೆಚ್ಚದ ನೆಪದಲ್ಲಿ ಸಂಸ್ಥೆಯು ಕೋಟ್ಯಂತರ ರೂಪಾಯಿಗಳನ್ನು ದುರುಪಯೋಗ ಮಾಡಿಕೊಂಡಿದೆ. ಆದರೆ, ರಾಜ್ಯದ ಆಟಗಾರರಿಗೆ ಅದಕ್ಕೆ ತಕ್ಕಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಿಲ್ಲ,” ಎಂದು ಅರ್ಜಿದಾರರು ಆರೋಪಿಸಿದ್ದಾರೆ. ನ್ಯಾಯಮೂರ್ತಿ ಮನೋಜ್ ತಿವಾರಿ ಅವರ ಏಕಸದಸ್ಯ ಪೀಠವು ಈ ಅರ್ಜಿಯ ಮೇಲಿನ ವಾದಗಳನ್ನು ಆಲಿಸಿದ್ದು, ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಮುಂದಿನ ವಿಚಾರಣೆಯು ಶುಕ್ರವಾರ ನಡೆಯಲಿದೆ.



















