ಬೆಂಗಳೂರು | 2026ನೇ ಸಾಲಿನ ಕರ್ನಾಟಕ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.
“ಮಾನವತೆಯ ಕಟ್ಟಡಕ್ಕೆ ಪ್ರೀತಿಯೊಂದೇ ಇಟ್ಟಿಗೆ” ಎಂಬ ಬಿ.ಆರ್. ಲಕ್ಷ್ಮಣರಾವ್ ಅವರ ಸಾಲುಗಳನ್ನು ಉಲ್ಲೇಖಿಸಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತು ನೀಡಲಾಗಿದ್ದು, ಶೈಕ್ಷಣಿಕ ಕ್ರಾಂತಿಗೆ ಸರ್ಕಾರ ಮುನ್ನುಡಿ ಬರೆದಿದೆ.
100 ಉರ್ದು ಶಾಲೆಗಳ ಹೈಟೆಕ್ ಉನ್ನತೀಕರಣ
ಈ ಬಾರಿಯ ಬಜೆಟ್ನ ಪ್ರಮುಖ ಹೈಲೈಟ್ ಎಂದರೆ ಉರ್ದು ಶಾಲೆಗಳ ಅಭಿವೃದ್ಧಿ. ಕಳೆದ ವರ್ಷ 117 ಮೌಲಾನಾ ಆಜಾದ್ ಮತ್ತು ಉರ್ದು ಶಾಲೆಗಳನ್ನು ಕೆ.ಪಿ.ಎಸ್ (KPS) ಮಾದರಿಯಲ್ಲಿ ಉನ್ನತೀಕರಿಸಲಾಗುತ್ತಿತ್ತು. ಅದರ ಮುಂದುವರಿದ ಭಾಗವಾಗಿ, ಪ್ರಸಕ್ತ ಸಾಲಿನಲ್ಲಿ ಇನ್ನೂ 100 ಉರ್ದು ಶಾಲೆಗಳನ್ನು 400 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಹೊಸ ಯೋಜನೆಗಳು
ಶಿಶುನಾಳ ಶರೀಫ ವಸತಿ ಶಾಲೆ: ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ CBSE ಪಠ್ಯಕ್ರಮದ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 2026-27ನೇ ಸಾಲಿನಲ್ಲಿ ಒಟ್ಟು 25 ಅಂತಹ ಶಾಲೆಗಳನ್ನು ತೆರೆಯುವ ಗುರಿ ಇದೆ.
ಲ್ಯಾಪ್ಟಾಪ್ ವಿತರಣೆ: ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ ನೀಡಲು 5,000 ವಿದ್ಯಾರ್ಥಿಗಳಿಗೆ ತಲಾ 50,000 ರೂ. ಮೌಲ್ಯದ ಲ್ಯಾಪ್ಟಾಪ್ ನೀಡಲಾಗುವುದು.
ತರಬೇತಿ ಕೇಂದ್ರಗಳು: NEET/JEE/K-CET ಪರೀಕ್ಷೆಗಳಿಗೆ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು ‘Center of Excellence’ ಗಳನ್ನಾಗಿ ಪರಿವರ್ತಿಸಲಾಗುವುದು.
ವಿದ್ಯಾರ್ಥಿನಿಲಯಗಳು: 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿ, ಹಳೆಯ ನಿಲಯಗಳ ಸಂಖ್ಯಾಬಲ ಹೆಚ್ಚಿಸಲಾಗುವುದು.
ಸಮುದಾಯಗಳ ಅಭಿವೃದ್ಧಿ ಮತ್ತು ಗೌರವಧನ
ಜೈನ, ಬೌದ್ಧ, ಸಿಖ್ ಅಭಿವೃದ್ಧಿ: ಈ ಮೂರು ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗಿದೆ.
ಧಮ್ಮಾಚಾರಿಗಳಿಗೆ ಗೌರವಧನ: ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ಮಾಸಿಕ 6,000 ರೂ. ಗೌರವಧನ ಘೋಷಿಸಲಾಗಿದೆ.
ಅಂಬೇಡ್ಕರ್ ಸಾಹಿತ್ಯ ಅನುವಾದ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಇತರೆ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದಿಸಲಾಗುವುದು.
ಸ್ವಯಂ ಉದ್ಯೋಗ ಮತ್ತು ಮಹಿಳಾ ಕಲ್ಯಾಣ
ಮೊಬೈಲ್ ಕಿಚನ್ ನೆರವು: ನಿರುದ್ಯೋಗಿ ಯುವಕರಿಗೆ ಫಾಸ್ಟ್ ಫುಡ್ ಟ್ರಕ್ ಅಥವಾ ಮೊಬೈಲ್ ಕಿಚನ್ ಆರಂಭಿಸಲು ಘಟಕ ವೆಚ್ಚದ ಶೇ.75 ರಷ್ಟು ಅಂದರೆ ಗರಿಷ್ಠ 3 ಲಕ್ಷ ರೂ. ಸಹಾಯಧನ ನೀಡಲಾಗುವುದು.
ಮಹಿಳಾ ವಸತಿ ನಿಲಯ: ಬೆಂಗಳೂರಿನಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ ನಾಲ್ಕು ಹೊಸ ವಸತಿ ನಿಲಯಗಳನ್ನು ಸ್ಥಾಪಿಸಲಾಗುವುದು.
ವೃದ್ಧಾಶ್ರಮಗಳಿಗೆ ನೆರವು: ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ ಸಮಗ್ರ ಆರೈಕೆ ಘಟಕಗಳನ್ನು ಸ್ಥಾಪಿಸಲು 5 ಕೋಟಿ ರೂ. ಒದಗಿಸಲಾಗಿದೆ.
ಇದನ್ನೂ ಓದಿ : ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!


















