ಬೀದರ್ : ಬೀದರ್ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಭಾರೀ ಹಗರಣ ಬೆಳಕಿಗೆ ಬಂದಿದ್ದು, ನಕಲಿ ಬಿಲ್ ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣ ಲೂಟಿ ಮಾಡಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ.
2017-18ನೇ ಸಾಲಿನಲ್ಲಿ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ ಬಿಲ್ಗಳನ್ನು ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ದುರುಪಯೋಗ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಚ್.ಡಿ. ನಾರಾಯಣ ಸ್ವಾಮಿ, ನಿವೃತ್ತ ಕಂಟ್ರೋಲರ್ ಕೆ.ಎಲ್. ಸುರೇಶ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಎಫ್ಟಿಎ ಮೃಂತ್ಯುಂಜಯ್ ಹಿರೇಮರ್, ಬೆಂಗಳೂರಿನ ಖಾಸಗಿ ಎಂಟರ್ಪ್ರೈಸಸ್ ಮಾಲೀಕ ಬೋಪಣ್ಣ ಮಂಜುನಾಥ್ ಹಾಗೂ ಖಾತೆಗೆ ಹಣ ಹಾಕಿಸಿಕೊಂಡು ತೆಗೆದುಕೊಟ್ಟ ರಾಮಗೊಂಡ ಕೂಡ ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ಖಾಸಗಿ ಎಂಟರ್ಪ್ರೈಸಸ್ ಒಂದು ಈ ಹಗರಣದಲ್ಲಿ ಭಾಗಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ತನಿಖೆ ತೀವ್ರಗೊಳಿಸಿದ್ದ ಲೋಕಾಯುಕ್ತ ಪೊಲೀಸರು ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಹಗರಣ ರಾಜ್ಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.
ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಡಾ.ಎ.ಎಸ್.ಸುಬ್ರಮಣೇಶ್ವರ್, ಎಸ್ಪಿಗಳಾದ ಬದ್ರಿನಾಥ್ ಹಾಗೂ ಸಿದ್ದರಾಜು ಮಾರ್ಗದರ್ಶನದಲ್ಲಿ ಬೀದರ್ ಲೋಕಾಯುಕ್ತ ಡಿಎಸ್ಪಿ ಹಣಮಂತರಾಯ, ಸಂತೋಷ್ ರಾಠೋಡ್ ಸೇರಿದಂತೆ ಹಲವು ಸಿಬ್ಬಂದಿ ದಾಳಿ ಹಾಗೂ ಬಂಧನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!



















