ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಶುಭ ಸಮಾಚಾರ ನೀಡಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2026-27ನೇ ಶೈಕ್ಷಣಿಕ ಸಾಲಿಗಾಗಿ ಧನಸಹಾಯ ಘೋಷಣೆ ಮಾಡಿದೆ. ಕಟ್ಟಡ ಕಾರ್ಮಿಕರ ಮಕ್ಕಳು 3 ಸಾವಿರ ರೂಪಾಯಿಯಿಂದ 75 ಸಾವಿರ ರೂಪಾಯಿವರೆಗೆ ಸಹಾಯಧನ ಪಡೆಯಬಹುದಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕಟ್ಟಡ ಕಾರ್ಮಿಕರ ಒಬ್ಬ ಅಥವಾ ಇಬ್ಬರು ಮಕ್ಕಳಿಗೆ ಸಹಾಯಧನ ನೀಡಲಾಗುತ್ತದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಅಧಿಕೃತವಾಗಿ ನೋಂದಾಯಿತರಾದ ಕಾರ್ಮಿಕರ ಮಕ್ಕಳು ಈ ಸೌಲಭ್ಯವನ್ನು ಪಡೆಯಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪಡೆದ ಕೋರ್ಸ್ ಗಳಿಗೆ ಅನುಗುಣವಾಗಿ ಧನಸಹಾಯ ನಿರ್ಧರಿಸಲಾಗುತ್ತದೆ.
ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಪೋಷಕರು ಕಟ್ಟಡ ಕಾರ್ಮಿಕರು ಎಂಬುದರ ಗುರುತಿನ ಚೀಟಿ, ವಿದ್ಯಾರ್ಥಿಯ ಪ್ರವೇಶಾತಿ ಪತ್ರ, ಇತ್ತೀಚಿನ ಫೋಟೊ ಸೇರಿ ಹಲವು ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಅವರಿಗೆ ಶಿಕ್ಷಣಕ್ಕೆ ನೆರವಾಗಬೇಕು ಎಂಬ ಉದ್ದೇಶದಿಂದ ಧನಸಹಾಯ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://ssp.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾರ್ಮಿಕ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಸರ್ಕಾರಿ ಬ್ಯಾಂಕ್ಗಳಲ್ಲಿ 11,403 ಕ್ಲರ್ಕ್ ನೇಮಕಾತಿ : ಕರ್ನಾಟಕದಲ್ಲೂ ಇವೆ ಹುದ್ದೆಗಳು



















