ಬಿಪಿಎಲ್ ಕಾರ್ಡ್ ದಾರರು ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಹಾಗೂ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದರೆ ಕೂಡಲೇ ಆಹಾರ ಇಲಾಖೆಗೆ ಹಿಂದಿರುಗಿಸಬೇಕೆಂದು ಸರ್ಕಾರ ಖಡಕ್ ಸೂಚನೆ ನೀಡಿದೆ.
ಒಂದು ವೇಳೆ ಮರಳಿ ನೀಡದಿದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ಜಾರಿ ಮಾಡಿದ್ದಾರೆ.
ಸರ್ಕಾರ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು ಪಡಿತರ ಚೀಟಿ ಹೊಂದಲು ಅನರ್ಹರು. ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು ಪಡಿತರ ಚೀಟಿ ಹೊಂದಲು ಅನರ್ಹರಾಗಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶ ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಪಡಿತರ ಚೀಟಿ ಹೊಂದುವಂತಿಲ್ಲ. ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹರಾಗಿರುತ್ತವೆ. ವಾರ್ಷಿಕವಾಗಿ 1.20 ಲಕ್ಷ ರೂ.ಗಳಿಗಿಂತಲೂ ಹೆಚ್ಚು ಆದಾಯ ಇರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹರಾಗಿವೆ. ಹೀಗಾಗಿ ಸರ್ಕಾರ ಖಡಕ್ ಸಂದೇಶ ಸಾರಿದೆ.