ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿರುವ ಕಟ್ಟಡಗಳನ್ನು ಯಾವುದೇ ಮುಲಾಜಿಲ್ಲದೆ ತೆರುವುಗೊಳಿಸಬೇಕೆಂದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಖಡಕ್ ಸೂಚನೆ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ತಹಸೀಲ್ದಾರ್ ಹಾಗೂ ಪಾಲಿಕೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚಿಸಿದ್ದಾರೆ.
ಹೀಗಾಗಿ ವಲಯವಾರು ಬೃಹತ್ ನೀರು ಗಾಲುವೆ ಹಾಗೂ ರಸ್ತೆಗಳ ನಿರ್ವಹಣೆಯ ಎಲ್ಲಾ ಜವಾಬ್ದಾರಿಯನ್ನು ಆಯಾ ವಲಯ ಆಯುಕ್ತರಿಗೆ ನೀಡಲು ಆದೇಶಿಸಿದರು. ಒತ್ತುವರಿಯಾಗಿರುವ ಬಗ್ಗೆ ಆದೇಶಿಸಲಾದ ಸ್ಥಳವನ್ನು ನವೆಂಬರ್ 15ರೊಳಗೆ ತೆರವುಗೊಳಿಸಲು ಎಲ್ಲಾ ವಲಯ ಆಯುಕ್ತರಿಗೆ ನಿರ್ದೇಶಿಸಿದರು.
ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡದಿದ್ದರೆ, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೆರೆ ಒತ್ತುವರಿ ಸಂಬಂಧಿಸಿದಂತೆ ಹೇಳಿದ ಅವರು, ಕೂಡಲೇ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳ ಸರ್ವೆ ನಡೆಸಬೇಕು. ಸರ್ವೆ ದಾಖಲೆ ಬಂದ ತಕ್ಷಣ ಖಾಸಗಿ ಅಥವಾ ಸಾರ್ವಜನಿಕವಾಗಿ ಕೆರೆ ಒತ್ತುವರಿ ಕಂಡುಬಂದಲ್ಲಿ ಕೂಡಲೇ ತೆರವು ಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಈ ವೇಳೆ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಯಾದ ಶ್ರೀ ಜಗದೀಶ್.ಜಿ, ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ಡಾ.ಹರೀಶ್ ಕುಮಾರ್, ವಿಶೇಷ ಜಿಲ್ಲಾಧಿಕಾರಿಗಳಾದ ಎಸ್.ಎಲ್.ಬಾಲಚಂದ್ರನ್, ವಲಯ ಆಯುಕ್ತರಾದ ಕರಿಗೌಡ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.