ಬೆಂಗಳೂರು: ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೊರೊನಾ ಕಾಲದಲ್ಲಿ ಅಸಹಾಯಕ ಜನರ ನೆರವಿಗೆ ಧಾವಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಿಸಬೇಕಾದ ಹೊಣೆ ಸರ್ಕಾರದ್ದಾಗಿರುತದೆ. ಆದರೆ, ಈ ವೇಳೆ ಜನರ ಜೀವದೊಂದಿಗೆ ಚೆಲ್ಲಾಟವಾಡಿ ದುಡ್ಡು ನುಂಗಲು ಯತ್ನಿಸಿದ್ದನ್ನು ಇಡೀ ಕರ್ನಾಟಕ ಕಂಡಿದೆ ಎಂದು ಸಿಎಂ ಗುಡುಗಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ಕಾಲದ ಪಿಪಿಇ ಕಿಟ್ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ನೇರವಾಗಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನ್ಯಾಯಮೂರ್ತಿ ಡಿಕುನ್ಹಾ ಸಮಿತಿ ಕಳೆದ ಆಗಸ್ಟ್ ತಿಂಗಳಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಸುಮಾರು 1,700ಕ್ಕೂ ಹೆಚ್ಚು ಪುಟಗಳ ತನಿಖಾ ವರದಿಯನ್ನು ಸಂಪುಟ ಉಪಸಮಿತಿ ಅಧ್ಯಯನ ನಡೆಸುತ್ತಿದೆ. ಅದು ನೀಡುವ ವರದಿಯನ್ನು ಸರ್ಕಾರ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ನಮ್ಮ ದೇಶದಲ್ಲಿರುವ ಕಂಪೆನಿಗಳು ಪಿಪಿಇ ಕಿಟ್ ಗಳನ್ನು 200 ರಿಂದ 300 ರೂ. ದರದಲ್ಲಿ ಮಾರಾಟ ಮಾಡಲು ಸಿದ್ಧ ಇರುವಾಗ ಬಿ.ಎಸ್.ಯಡಿಯೂರಪ್ಪ ಮತ್ತು ಶ್ರೀರಾಮುಲು ಸೇರಿಕೊಂಡು ಚೀನಾದ ಕಂಪೆನಿಯಿಂದ ರೂ.2,000ಕ್ಕೆ ಒಂದರಂತೆ ಪಿಪಿಇ ಕಿಟ್ಗಳನ್ನು ಖರೀದಿ ಮಾಡಿರುವುದನ್ನು ದಾಖಲೆ ಸಹಿತ ಕೊರೊನಾ ಕಾಲದಲ್ಲಿ ಹೇಳಿದ್ದೇವು.
ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ತನಿಖಾ ಸಮಿತಿ ನೀಡಿರುವ ವರದಿಯನ್ನು ನಾನಿನ್ನೂ ಪೂರ್ತಿ ಓದಿಲ್ಲ. ನನ್ನ ಪ್ರಕಾರ ಮಾಧ್ಯಮಗಳಲ್ಲಿ ವರದಿಯಾಗಿರುವುದು ಒಂದು ‘‘ಮಂಜುಗಡ್ಡೆಯ ಒಂದು ಸಣ್ಣ ತುದಿ’’ ಮಾತ್ರ. ಒಂದು ಅಂದಾಜಿನ ಪ್ರಕಾರ ಹತ್ತರಿಂದ ಹದಿನೈದು ಸಾವಿರ ಕೋಟಿ ರೂಪಾಯಿಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ. ತನಿಖಾ ಸಮಿತಿ ಆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿರಬಹುದು ಎಂದು ಸಿಎಂ ಗುಡುಗಿದ್ದಾರೆ.
ಕೊರೊನಾ ವೈರಸ್ನಿಂದಾಗಿ ಸಂಭವಿಸಿದ ಸಾವಿನ ಬಗ್ಗೆ ಆಗಿನ ಸರ್ಕಾರ ಕೊಟ್ಟಿರುವ ಸಾವಿನ ಸಂಖ್ಯೆ ಏನೇ ಇರಬಹುದು. ನಮ್ಮ ಪ್ರಕಾರ ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಯುವಜನರು ಹೀಗೆ 50,000ಕ್ಕೂ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ರಾಜ್ಯ ಸರ್ಕಾರ ಸಕಾಲದಲ್ಲಿ ಚಿಕಿತ್ಸೆ, ಔಷಧಿ ಮತ್ತು ಪ್ರತಿಬಂಧಕ ಕ್ರಮಗಳನ್ನು ಕೈಗೊಂಡಿದ್ದರೆ ಇಷ್ಟೊಂದು ಸಾವು ಖಂಡಿತ ಸಂಭವಿಸುತ್ತಿರಲಿಲ್ಲ. ಜನ ಕೊರೊನಾ ವೈರಸ್ಗಿಂತ ಹೆಚ್ಚಾಗಿ ಬಿಜೆಪಿಯ ಭ್ರಷ್ಟಾಚಾರದ ವೈರಸ್ನಿಂದ ಸತ್ತಿದ್ದಾರೆ. ಈ ಸಾವಿಗೆ 2019 ರಿಂದ 2023ರ ವರೆಗೆ ರಾಜ್ಯದಲ್ಲಿ ಇದ್ದ ಬಿಜೆಪಿ ನೇತೃತ್ವದ ಸರ್ಕಾರವೇ ನೇರ ಹೊಣೆ ಎನ್ನುವುದರಲ್ಲಿ ಸಂಶಯವೇ ಇಲ್ಲ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.