ಬೆಂಗಳೂರು: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ಕಲ್ಪಿಸವು ಪ್ರಸ್ತಾವನೆಯು ಸರ್ಕಾರ ಮುಂದಿದೆ ಎನ್ನಲಾಗಿದೆ. ಇದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಅಲ್ಲದೇ, ಮುಸ್ಲಿಂ ಮತಗಳನ್ನು ಸೆಳೆಯುವುದಕ್ಕಾಗಿ ಇಂತಹ ಹೇಯ ಕೃತ್ಯ ಎಸಗಲಾಗುತ್ತಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಸೆಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎಂದು ಕೂಡ ತಿಳಿದು ಬಂದಿದೆ. ಹೀಗಾಗಿ ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
1 ಕೋಟಿ ರೂ. ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ 4 ಮೀಸಲಾತಿ ನೀಡುವ ಕುರಿತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಸಿಎಂ ಅನುಮೋದನೆ ನೀಡಿ, ತಿದ್ದುಪಡಿಗೆ ಸೂಚಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮಂಡನೆ ಮಾಡಲು ಸರ್ಕಾರ ಮುಂದಾಗಿದೆ.
ಈಗಾಗಲೇ ಎಸ್ಸಿ, ಎಸ್ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ. 24ರ ಮೀಸಲಾತಿ ನೀಡಿರುವ ಸರ್ಕಾರ, ಒಬಿಸಿ ಸಮುದಾಯಕ್ಕೆ ಶೇ. 4ರಷ್ಟು ಮೀಸಲಾತಿ ನೀಡಿದೆ. 2A ಅಡಿ ಗುತ್ತಿಗೆಯಲ್ಲಿ ಶೇ. 15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ ಶೇ 43ರಷ್ಟು ಮೀಸಲಾತಿ ನೀಡಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ. 4 ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.