ಬೆಂಗಳೂರು: ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್ ಆಗಿದ್ದಾನೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೊಡಾಜೆ ಮೊಹಮ್ಮದ್ ಷರೀಫ್ ಬಂಧಿತ ಆರೋಪಿ. ಎನ್ ಐಎ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
ಲುಕ್ ಔಟ್ ನೋಟಿಸ್ ಜಾರಿಯಾಗಿದ್ದ ಆರೋಪಿ ಬಹ್ರೇನ್ ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪಿಎಫ್ ಐ ಸಂಘಟನೆಯ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರೋಪಿ, ಸಂಘಟನೆಯ ಬಾಹ್ಯ ಸೇವಾ ತಂಡದ ಮುಖ್ಯಸ್ಥನಾಗಿದ್ದ. ಪ್ರಕರಣದ ಇತರ ಆರೋಪಿಗಳು ಸೇರಿ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ನಲ್ಲಿ ಪಿಎಫ್ ಐನ ಬಾಹ್ಯ ತಂಡದ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದರು. ಪಿಎಫ್ ಐನ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿದ ನಂತರ ಪ್ರವೀಣ್ ನೆಟ್ಟಾರು ಹತ್ಯೆಯ ಆದೇಶ ನೀಡುವ ಜವಾಬ್ದಾರಿಯನ್ನು ಇತನೇ ಹೊತ್ತಿದ್ದ ಎನ್ನಲಾಗಿದೆ.
ಅಲ್ಲದೇ, ಆರೋಪಿಯ ಸೂಚನೆಯ ಮೇರೆಗೆ ಆರೋಪಿ ಮುಸ್ತಫಾ ಪೈಚಾರ್ ಮತ್ತು ಆತನ ತಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆಗೈದಿತ್ತು ಎಂದು ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಪ್ರಕರಣದಲ್ಲಿ 23 ಜನ ಆರೋಪಿಗಳ ವಿರುದ್ಧ ಎನ್ ಐಎ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.