ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ತಲೆಯ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.
ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮೀದೇವಿ ನಗರ ವಾರ್ಡ್ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋ ಹತ್ತಿರ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಮುನಿರತ್ನ ಮೇಲೆಯೂ ಮೊಟ್ಟೆ ಎಸೆಯಲಾಗಿದೆ. ತಮ್ಮ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಮುಂದಾಗಿದ್ದರು ಎಂದು ಮುನಿರತ್ನ ಆರೋಪಿಸಿದ್ದಾರೆ.
ಸ್ಥಳಕ್ಕೆ ನಂದಿನಿ ಲೇಔಟ್ ಠಾಣೆ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಂತರ ರಸ್ತೆಯಲ್ಲೇ ಕುಳಿತು ಶಾಸಕ ಮುನಿರತ್ನ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಾರನ್ನು ಜಖಂಗೊಳಿಸಿರುವ ಆರೋಪ ಕೇಳಿ ಬಂದಿದೆ.