ಬೆಂಗಳೂರು: ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಬೀದರ್ ನ 26 ವರ್ಷದ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ, ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ಈ ರಾಜ್ಯ ಹಿಂದೆ ಯಾವತ್ತೂ ಕಂಡಿರಲಿಲ್ಲ. ಸಹೋದರಿಯರು ದೂರು ಕೊಡಲು ಹೋದಾಗ 12 ಗಂಟೆಗಳ ಕಾಲ ಪೊಲೀಸರು ಏನೂ ತಲೆಕೆಡಿಸಿಕೊಂಡಿಲ್ಲ. ಹೆಣ್ಣು ಮಕ್ಕಳಿಗೆ ಹೀಯಾಳಿಸಿ ಅಪಮಾನ ಮಾಡಿ ಪೊಲೀಸರು ನಿಂದಿಸಿರುವುದು ದೊಡ್ಡ ಅಪರಾಧವಾಗಿದೆ. ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ, ಕಲಬುರಗಿ ಜಿಲ್ಲೆ ಯಾರ ಕಪಿಮುಷ್ಠಿಯಲ್ಲಿದೆ ಎಂದು ಆರೋಪಿಸಿದ್ದಾರೆ.
ಕೂಡಲೇ ಈ ಪ್ರಕರಣದ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಪಾಂಚಾಳ್ ಡೆತ್ ನೋಟ್ ನಲ್ಲಿ ಆಂದೋಲಾ ಸ್ವಾಮೀಜಿ ಸೇರಿದಂತೆ ಬಿಜೆಪಿ ಮುಖಂಡರನ್ನು ಹತ್ಯೆ ಮಾಡಲು ಸೊಲ್ಲಾಪುರದ ಸುಪಾರಿ ಕಿಲ್ಲರ್ ಗಳನ್ನು ಬಾಡಿಗೆಗೆ ಪಡೆದಿದ್ದಾರೆ ಎಂಬ ಅಂಶ ಉಲ್ಲೇಖಿಸಿದ್ದಾರೆ. ಇದು ಬಹಳ ಗಂಭೀರ ವಿಷಯ, ಜನವರಿ 3ರವರೆಗೆ ಬಿಜೆಪಿ ಕಾಯುತ್ತದೆ, ಭಗವಂತ ಬುದ್ಧಿಕೊಟ್ಟು ಸಿಎಂ ಸಿಬಿಐ ತನಿಖೆಗೆ ಆದೇಶ ಮಾಡಿದರೆ ಒಳ್ಳೆಯದು ಜನವರಿ 4 ರಂದು ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರೇ ನೀವು ಪ್ರಿಯಾಂಕ್ ಖರ್ಗೆಯನ್ನು ಮುಟ್ಟಿದರೆ ದೆಹಲಿಯಿಂದ ಕರೆ ಬಂದು ನಿಮ್ಮ ಸ್ಥಾನಕ್ಕೆ ಕುತ್ತು ಬರುತ್ತದೋ ಎಂದು ಭಯ ಪಡಬೇಡಿ. ಕೂಡಲೇ ನೀವು ಕ್ರಮ ಕೈಗೊಳ್ಳಿ. ಆಗ ಮಾತ್ರ ನೀವೊಬ್ಬ ಬಲಿಷ್ಠ ಹಾಗೂ ಅಹಿಂದ ನಾಯಕ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.