ಬೆಂಗಳೂರು: ಆಡಳಿತದಲ್ಲಿ ಐಎಎಸ್, ಐಪಿಎಸ್, ಐಆರ್ ಎಸ್, ಐಎಫ್ ಎಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿರುತ್ತದೆ. ಹೀಗಾಗಿ ನೀವೆಲ್ಲ ದಕ್ಷತೆಯಿಂದ ಕೆಲಸ ಮಾಡಿದಾಗ, ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸ ವರ್ಷದ ಶುಭಾಶಯ ತಿಳಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಈ ರೀತಿ ಕಿವಿ ಮಾತು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆಡಳಿತಾಂಗದಲ್ಲಿ ಐಎಎಸ್, ಐಪಿಎಸ್, ಐಆರ್ಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿರಂತರ ನಿಗಾ ವಹಿಸುತ್ತೇವೆ. ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದಿದ್ದಾರೆ.
ಭಾರತದ ಆರ್ಥಿಕತೆ ಕುಸಿತ ಕಂಡಿದ್ದಾಗ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದರು. ದೇಶದ ಆರ್ಥಿಕ ಬೆಳವಣಿಗೆ ಆಗಿ ಇದರ ಲಾಭ ದೇಶದ ಜನರಿಗೆ ಲಭಿಸುವಂತೆ ಮಾಡಿದರು. ಸಂವಿಧಾನದ ನಿರ್ದೇಶಕ ತತ್ವಗಳಾದ ಸಮಾನತೆ, ಜಾತ್ಯತೀತತೆ, ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ದೇಶದ ಜನರ ಮೂಲಭೂತ ಹಕ್ಕುಗಳನ್ನಾಗಿ ಮಾಡಿದರು. ಮಾಹಿತಿ ಹಕ್ಕು, ಆಹಾರದ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಕಡ್ಡಾಯ ಮಾಡಿದರು. ಆ ಮೂಲಕ ಸಮಾನತೆಯೆಡೆಗೆ ದೇಶವನ್ನು ಮುನ್ನಡೆಸಿದರು ಎಂದು ಹೇಳಿದ್ದಾರೆ.
ಸಮಾನ ಅವಕಾಶಗಳು ಸಿಕ್ಕಾಗ ಸಮಾನತೆಯ ದಿಕ್ಕಿಗೆ ನಾವು ಸಾಗಬಹುದು ಎನ್ನುವ ಕಾರಣದಿಂದಲೇ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಜನರ ಕೈಯಲ್ಲಿ ಹಣ ಇರಬೇಕು, ಜನರು ಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಇದಕ್ಕೆ ತಕ್ಕಂತೆ ರಾಜ್ಯದ ಜನರ ಜೇಬಿಗೆ ಹಣ ನೀಡುವ ಗ್ಯಾರಂಟಿಗಳನ್ನು ನಾವು ಜಾರಿ ಮಾಡಿದೆವು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರವಾಗಿ ಜನರಿಗೆ ಹಣ ತಲುಪಿಸುತ್ತಿದ್ದೇವೆ. ಇದು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ.
ಇಲ್ಲಿಯವರೆಗೂ 35 ಸಾವಿರ ಕೋಟಿ ರೂ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ್ದೇವೆ. ಈಗಲಾದರೂ ನಂಜುಂಡಪ್ಪ ಅವರ ವರದಿಯಲ್ಲಿನ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿದೆಯಾ ಎನ್ನುವುದನ್ನು ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿ ರಚಿಸಲಾಗಿದೆ. ಏಕೆ ಉತ್ತರ ಕರ್ನಾಟಕದ ಅಸಮಾನತೆ ಕಡಿಮೆ ಆಗಿಲ್ಲ ಎನ್ನುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿದ್ದೇವೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ನೀವೂ ಅಷ್ಟೆ ಗಂಭೀರವಾಗಿ ಪರಿಗಣಿಸಿ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಶ್ರಮಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.