ಬೆಂಗಳೂರು: ಕಾಂತಾರಾ ಚಾಪ್ಟರ್-1 ಹಾಗೂ ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ನಾಶವಾಗಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಅರಣ್ಯದಲ್ಲಿ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಇನ್ನು ಮುಂದೆ ಅರಣ್ಯ ಪ್ರದೇಶದಲ್ಲಿ ಸಿನಿಮಾ, ಸಾಕ್ಷ್ಯ ಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣ ಮಾಡುವುದಿದ್ದರೂ ಸರ್ಕಾರದಿಂದ ಅನುಮತಿ ಪಡೆಯಲೇಬೇಕು ಎಂದು ಕಡ್ಡಾಯವಾಗಿ ಸೂಚಿಸಿದ್ದಾರೆ.
ಈ ಕುರಿತು ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈಗಾಗಲೇ ಚಲನಚಿತ್ರ, ದೂರದರ್ಶನ, ಸಾಕ್ಷ್ಯಚಿತ್ರ, ಧಾರಾವಾಹಿ,ಸೇರಿದಂತೆ ಚಿತ್ರೀಕರಣ ಮಾಡಲಾಗುತ್ತಿದೆ.
ಇಲ್ಲಿಯವರೆಗೆ ಶೂಟಿಂಗ್ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಹೆಚ್ಚಾಗಿರುತ್ತದೆ.
ಇದರಿಂದಾಗಿ ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆಯಾಗುವಂತಾಗಿದೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ ಮಟ್ಟದಲ್ಲಿ ಅನುಮತಿ ನೀಡುವುದ ಕಡ್ಡಾಯವಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.