ಹಾಸನ: ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರದ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ಮಂತ್ರಿಯಾಗಿ 7 ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲಾ ಕಾರ್ಖಾನೆ, ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸಿನಿಂದ ಪುರಸ್ಕರಿದ್ದಾರೆ. ಆದರೆ, ಕರ್ನಾಟಕಕ್ಕೆ ಇಂತಹದ್ದು ಬೇಕು ಎಂದು ರಾಜ್ಯದಿಂದ ಯಾರೊಬ್ಬರೂ ನನ್ನ ಮುಂದೆ ಬಂದು ಚರ್ಚೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ನಾನು ಮೊದಲ ಸಹಿ ಹಾಕಿದ್ದೇ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಉಳಿಸಲು. 2011ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವೇ ಒಪ್ಪಿಗೆ ನೀಡಿದ್ದ ಸಂಡೂರಿನ ದೇವದಾರಿ ಗಣಿ ಯೋಜನೆ ಅನುಷ್ಠಾನಕ್ಕೆ ಹಣಕಾಸು ನೆರವು ಪಡೆಯಲು ಅನುಮತಿ ಕೊಡುವ ಬಗ್ಗೆ ನಾನು ಹಣಕಾಸು ಸಚಿವಾಲಯಕ್ಕೆ ಶಿಫಾರಸು ಮಾಡಿದೆ. ಅದನ್ನೇ ತಿರುಚಿ ಹೇಳಿದ ಕಾಂಗ್ರೆಸ್ ನಾಯಕರು, ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ನನ್ನ ಒಳ್ಳೆಯ ಪ್ರಯತ್ನಕ್ಕೆ ವ್ಯವಸ್ಥಿತವಾಗಿ ಅಡ್ಡಿಪಡಿಸಿದರು ಎಂದು ಆರೋಪಿಸಿದ್ದಾರೆ.
ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಏನೇನು ಷಡ್ಯಂತ್ರ ಮಾಡಬೇಕೋ ಎಲ್ಲವನ್ನೂ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ. ದೇವದಾರಿ ಗಣಿ ಯೋಜನೆಗೆ ರಾಜ್ಯ ಸರ್ಕಾರ ಅಡ್ಡಿಪಡಿಸಿದ ಕಾರಣದಿಂದ ಮಂಗಳೂರಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಕಾರ್ಖಾನೆಯಲ್ಲಿ ನೂರಾರು ಕಾರ್ಮಿಕರು ಕೆಲಸ ಕಳೆದುಕೊಂಡರು. ಅವರೆಲ್ಲರೂ ನನ್ನಲ್ಲಿ ಬಂದು ದುಃಖ ತೋಡಿಕೊಂಡರು. ನನ್ನ ರಾಜ್ಯದ ಪ್ರತಿಷ್ಠಿತ ಕಾರ್ಖಾನೆಗೆ ಬೀಗ ಬೀಳಬಾರದು ಎಂಬ ಸದುದ್ದೇಶದಿಂದ ಕುದುರೆಮುಖ ಕಂಪನಿಯನ್ನು ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC) ದಲ್ಲಿ ವಿಲೀನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ರಾಜಕೀಯ ಪ್ರತಿಷ್ಠೆಯಿಂದ ಕೈಗಾರಿಕೆಗಳ ಕತ್ತು ಹಿಸುಕಲು ಪ್ರಯತ್ನ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಅವರ ಸರಕಾರ ಅವುಗಳಿಗೆ ಜೀವ ಕೊಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ನಮ್ಮ ಮುಂದೆ ಏನನ್ನೂ ಚರ್ಚೆ ಮಾಡದೇ ಬಜೆಟ್ ನಲ್ಲಿ ಏನನ್ನು ಕೊಟ್ಟಿಲ್ಲ ಎಂದು ಈಗ ಹುಯಿಲೆಬ್ಬಿಸಿದರೆ ಉಪಯೋಗವೇನು? ಪ್ರಸ್ತಾವನೆಗಳನ್ನು ತಂದು ಕೊಡುವುದು ಬಿಟ್ಟು ಪ್ರಧಾನಿ ಮುಂದೆ ಮಾತನಾಡುವ ಶಕ್ತಿ ಇಲ್ಲ ಎಂದರೆ ಹೇಗೆ? ನನಗೆ ಕನ್ನಡಿಗರು ಕೊಟ್ಟಿರುವ ಶಕ್ತಿಯಿಂದಲೇ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು ಉಳಿಸುವುದು ಸಾಧ್ಯವಾಯಿತು. ಅದಕ್ಕೆ ಮೋದಿ ಅವರು ಕೊಟ್ಟ ಸಹಕಾರವನ್ನು ನಾನೆಂದೂ ಮರೆಯಲಾರೆ ಎಂದು ಸಚಿವರು ಹೇಳಿದರು.