ಬಳ್ಳಾರಿ: ಜಿಲ್ಲೆಯ ಕಂಪ್ಲಿ ಗುಡ್ಡಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣಿ ಸಂಕುಲಕ್ಕೆ ಹಾನಿಯಾದ ಆತಂಕ ಕಾಡುತ್ತಿದೆ.
ತಾಲೂಕಿನ ಮೆಟ್ರಿ ಬಳಿಯ ಚಿನ್ನಾಪೂರ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಪ್ರಾಣಿ ಸಂಕುಲಕ್ಕೆ ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೇ, ಅಪಾರ ಪ್ರಮಾಣದ ಕಾಡು ನಾಶವಾಗಿದ್ದಕ್ಕೆ ಪರಿಸರವಾದಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಮೂರರಿಂದ 4 ಕಿ.ಮೀಟರ್ ನಷ್ಟು ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಗುಡ್ಡದಲ್ಲಿ ಕರಡಿ, ಚಿರತೆ, ನವಿಲುಗಳು ಸೇರಿದಂತೆ ಅನೇಕ ಕಾಡು ಪ್ರಾಣಿಗಳಿದ್ದು, ಪ್ರಾಣಿ- ಪಕ್ಷಿ ಸಂಕುಲಕ್ಕೆ ಹಾನಿಯಾಗುವ ಭೀತಿ ಎದುರಾಗಿದೆ.
ಘಟನೆ ನಡೆದ 3 ಗಂಟೆಗಳ ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.