ಮಂಡ್ಯ: ಉದ್ಯೋಗ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂ. ವಂಚಿಸಿದ್ದ (Farud) ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳ ಹೆಸರು ಹೇಳಿ, ನಕಲು ಸಹಿ ಮಾಡಿ ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿ ಎಚ್.ಸಿ. ವೆಂಕಟೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ನಗರದ ತಾವರೆಗೆರೆ ನಿವಾಸಿ ಎನ್ನಲಾಗಿದೆ.
ಬಂಧಿತ ಆರೋಪಿಯು ತಾನು, ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಸುಮಾರು ಎರಡು ಕೋಟಿ ರೂ.ಗೂ ಅಧಿಕ ಹಣ ವಂಚಿಸಿದ್ದಾನೆ ಎನ್ನಲಾಗಿದೆ. ಹಣ ನೀಡಿದ ಬಳಿಕ, ನಕಲಿ ನೇಮಕಾತಿ ಪತ್ರವನ್ನು ಸಂತ್ರಸ್ತರಿಗೆ ನೀಡುತ್ತಿದ್ದ ಎನ್ನಲಾಗಿದೆ. ಅಬಕಾರಿ ಇಲಾಖೆಯಲ್ಲಿ ಚಾಲಕ ಹುದ್ದೆ ಕೊಡಿಸುತ್ತೇನೆಂದು ಓರ್ವರಿಂದ ನಕಲಿ ದಾಖಲೆ ಸೃಷ್ಟಿಸಿ ಮೂವರಿಂದ 45 ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಪೂರ್ವ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿದ್ದವು. ಸದ್ಯ ಆರೋಪಿ ಬಂಧಿಸಿರುವ ಪೊಲೀಸರು, ಆತನಿಂದ ಹಲವು ದಾಖಲೆಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.