ಹಾಸನ: ಧರ್ಮಸ್ಥಳಕ್ಕೆ (Dharmasthala) ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ ಪಾದಾಚಾರಿಗಳ (Pedestrian) ಮೇಲೆ ಖಾಸಗಿ ಬಸ್ ಹರಿದಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಸುರೇಶ್ (60), ಕುಮಾರ್ (55) ಸಾವನ್ನಪ್ಪಿರುವ ದುರ್ದೈವಿಗಳು. ಮೃತರನ್ನು ಮಂಡ್ಯ ಜಿಲ್ಲೆ, ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಗ್ಗೆ ಧರ್ಮಸ್ಥಳಕ್ಕೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ದಿನೇಶ್ ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.