ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಹಾಲು ದರ ಏರಿಕೆ ವಿರುದ್ಧ ಎಕ್ಸ್ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ 3 ನೇ ಬಾರಿ ಹಾಲಿನ ದರ ಏರಿಕೆ!
ಆಗಸ್ಟ್ 2023 – ₹3 ಏರಿಕೆ
ಜೂನ್ 2024 – ₹2 ಏರಿಕೆ
ಮಾರ್ಚ್ 2025 – ₹4 ಏರಿಕೆ
20 ತಿಂಗಳಲ್ಲಿ ಒಟ್ಟು – ₹9 ಏರಿಕೆ
ಸಿಎಂ ಸಿದ್ದರಾಮಯ್ಯ ನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 20 ತಿಂಗಳಿನಲ್ಲಿ ಹಾಲಿನ ದರವನ್ನ ಮೂರು ಬಾರಿ ಒಟ್ಟು 9 ರೂಪಾಯಿ ಹೆಚ್ಚಿಸಿದ್ದೀರಿ. 2023ರ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ 2024 ಜೂನ್ ನಲ್ಲಿ 2 ರೂಪಾಯಿ ಏರಿಕೆ ಆಯ್ತು.
ಈಗ ಮತ್ತೊಮ್ಮೆ ಏಕಾಏಕಿ 4 ರೂಪಾಯಿ ಹೆಚ್ಚಾಗಿದೆ.
ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ದಿನಬಳಕೆ ವಸ್ತುಗಳ ಬೆಲೆಯಿಂದ ಕಂಗಾಲಾಗಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ.
ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ,
ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ.
ಒಂದು ವೇಳೆ ಗ್ರಾಹಕರ ಮೇಲೆ ಹೊರೆ ಹೊರಿಸುವುದು ಅನಿವಾರ್ಯವಾದರೆ, ಹೆಚ್ಚಳ ಮಾಡಿರುವ ₹4 ರೂಪಾಯಿ ನೇರವಾಗಿ ಹಾಲು ಉತ್ಪಾದಕರ ಕೈಸೇರುವಂತೆ ನೋಡಿಕೊಳ್ಳಿ.
ಆಡಳಿತ ವೆಚ್ಚ, ಮತ್ತೊಂದು ವೆಚ್ಚ ಎಂದು ಅತ್ತ ರೈತರಿಗೂ ಲಾಭವಿಲ್ಲದೆ ಇತ್ತ ಗ್ರಾಹಕರ ಜೇಬಿಗೂ ಕತ್ತರಿ ಹಾಕಿದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ, ಎಚ್ಚರಿಕೆ ಎಂದು ಬರೆದುಕೊಂಡಿದ್ದಾರೆ.