ತುರುವೇಕೆರೆ: ತುರುವೇಕೆರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿವೆ.
ಪ್ರತಿಭಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಕೇವಲ ಎರಡು ವರ್ಷಗಳಲ್ಲಿ ಭ್ರಷ್ಟಾಚಾರ, ದುರಾಡಳಿತಕ್ಕಾಗಿ ಮಾದರಿಯಾಗಿದೆ. ಗಾಳಿಯೊಂದನ್ನು ಹೊರತು ಪಡಿಸಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ್ದಾರೆ. ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ದುಪ್ಪಟ್ಟು ಮಾಡಿದ್ದಾರೆ. ರೈತರಿಗೆ ಸಿಗಬೇಕಾದ ಹಾಲಿನ ಪ್ರೋತ್ಸಾಹ ಧನವನ್ನ 600 ಕೋಟಿ ರೂ. ಗೂ ಅಧಿಕ ಇನ್ನೂ ಬಿಡುಗಡೆ ಮಾಡಿಲ್ಲ.
ಈ ಸರ್ಕಾರ ರೈತ ವಿರೋಧಿ. ಕೊಬ್ಬರಿಗೆ ಕ್ವಿಂಟಲ್ ಗೆ 18 ಸಾವಿರ ರೂ. ನಿಗದಿ ಮಾಡಿಸಿದ್ದು ಕುಮಾರಸ್ವಾಮಿ. ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ, ಅಮಿತ್ ಶಾ, ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಕೊಬ್ಬರಿಗೆ ಹೆಚ್ಚಿನ ದರ ನಿಗದಿ ಮಾಡಿದ್ದಾರೆ. ಹೀಗಾಗಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.
ಈ ಸರ್ಕಾರಕ್ಕೆ 5 ಗ್ಯಾರಂಟಿಗಳನ್ನು ಸಮರ್ಪಕವಾಗಿ ಕೊಡಲು ಆಗುತ್ತಿಲ್ಲ. ಈ ಸರ್ಕಾರ ಚುನಾವಣಾ ಗೆಲುವಿಗಾಗಿ ಜನರನ್ನು ಯಾಮಾರಿಸಿಕೊಂಡು ಹೋಗುತ್ತಿದೆ. ಇದು ಬಹಳ ದಿನ ನಡೆಯುವುದಿಲ್ಲ. ಜಿಪಂ, ತಾಪಂ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ನೀವು ಸಾಲ ಮಾಡುತ್ತಾ ಹೋದರೆ, ಮುಂದಿನ ಸರ್ಕಾರಗಳು ಹೇಗೆ ಕೆಲಸ ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಜಾತಿ ರಾಜಕಾರಣ ಮಾಡಬೇಡಿ. ಸದನದಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕು. ಆದರೆ, ಹನಿಟ್ರ್ಯಾಪ್ ಬಗ್ಗೆ ಚರ್ಚೆ ಆಗುತ್ತೆ. ತಮ್ಮೆಲ್ಲರನ್ನು ಈ ಸರ್ಕಾರ ಟ್ರ್ಯಾಪ್ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.