ಕೋಲಾರ: ಕೋಲಾರ ಹಾಲು ಒಕ್ಕೂಟ ಕೋಚಿಮುಲ್ ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ಆಡಳಿತ ಮಂಡಳಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸುವಂತೆ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆಗ್ರಹಿಸಿದ್ದರು.

2023-24, 2024-25ನೇ ಸಾಲಿನಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. 250 ಕೋಟಿ ರೂ. ವೆಚ್ಚದ MVK ಗೋಲ್ಡನ್ ಡೈರಿ ಗುತ್ತಿಗೆಯಲ್ಲಿ ಅವ್ಯವಹಾರ, ಸೋಲಾರ್ ಪ್ಲಾಂಟ್ ಟೆಂಡರ್, ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಆರೋಪ ಮಾಡಿದ್ದರು. ಹೀಗಾಗಿ ಶಾಸಕ ನಾರಾಯಣಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ, ಸಹಕಾರ ಇಲಾಖೆ ಸಚಿವರಿಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು.
ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ನೇತೃತ್ವದ ಆಡಳಿತ ಮಂಡಳಿಯಲ್ಲಿ ಅಕ್ರಮ ಆರೋಪ ನಡೆದಿರುವ ಕುರಿತು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ರಾಜ್ಯ ಸಹಕಾರ ಸಂಘಗಳ ನಿಬಂಧಕರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಂಗನಾಥ ಆದೇಶ ಹೊರಡಿಸಿದ್ದಾರೆ.