ರಾಯಚೂರು : ಚರಂಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದ ಹೊರವಲಯದಲ್ಲಿರುವ ಠಾಕೂರ್ ಬಡಾವಣೆಯಲ್ಲಿ ನಡೆದಿದೆ. ಮುದಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೀನಿಯರ್ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಕೋರಿ (34) ಎಂಬುವವರ ಶವ ಪತ್ತೆಯಾಗಿದೆ. ಮಂಜುನಾಥ್ ಕೋರಿ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಆದರೆ, ಈಗ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಳೆದ ಎರಡು ದಿನಗಳಿಂದ ಮಂಚುನಾಥ್ ದ್ವಿಚಕ್ರ ವಾಹನ ಒಂದೇ ಕಡೆ ನಿಂತಿರುವುದಕ್ಕೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಯಾರೋ ಕೊಲೆ ಮಾಡಿ ಶವವನ್ನು ಚರಂಡಿಗೆ ಎಸೆದಿದ್ದಾರೆಂದು ಮಂಜುನಾಥ್ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ, ಶನಿವಾರ ರಾತ್ರಿ ಪತ್ನಿಯೊಂದಿಗೆ ಫೋನ್ ನಲ್ಲಿ ಮಾತನಾಡಿದ್ದ ಎನ್ನಲಾಗಿದೆ.
ಸಣ್ಣ ಕಾಲುವೆಯಲ್ಲಿ ಬಿದ್ದು ಸಾಯಲು ಹೇಗೆ ಸಾಧ್ಯ? ನಮ್ಮ ಮಾವನೇ ನನ್ನ ಪತಿಯನ್ನು ಕೊಲೆ ಮಾಡಿಸಿದ್ದಾರೆ ಎಂದು ಮಂಜುನಾಥ್ ಪತ್ನಿ ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.