ಬೆಂಗಳೂರು: ರಾಜ್ಯದ (Karnataka) ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ಮಳೆ(Rain) ಸುರಿಯುತ್ತಿದೆ. ಮುಂಗಾರು ಪೂರ್ವ ಮಳೆಯಿಂದಾಗಿ ಹಲವೆಡೆ ಜನ ಬೆಚ್ಚಿ ಬಿದ್ದಿದ್ದಾರೆ. ಈ ಮಳೆ ಇನ್ನೂ ಒಂದು ವಾರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹಲವೆಡೆ ಹವಾಮಾನ ಇಲಾಖೆ IMD) ಅಲರ್ಟ್ ಘೋಷಿಸಿದೆ.
ರಾಜ್ಯಕ್ಕೆ ಈ ಬಾರಿ ಮುಂಗಾರು ಮೇ 27ಕ್ಕೆ ಪ್ರವೇಶ ಮಾಡಲಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ. ಇಂದು ಮತ್ತು ನಾಳೆ ಕೂಡ ಇದೇ ರೀತಿ ಮಳೆ ಸುರಿಯುವ ಸಾಧ್ಯತೆ ಇದ್ದು, ಎರಡೂ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 22ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೇ 21, 27ರಂದು ಬಾಗಲಕೋಟೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 21ರಿಂದ 27ರ ವರೆಗೆ ಬೆಳಗಾವಿಯಲ್ಲಿ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮೇ 22, 23ರ ವರೆಗೆ ಬೀದರ್, ಮೇ 21ರಿಂದ 27ರ ವರೆಗೆ ಧಾರವಾಡ, ಮೇ 21, 22ರಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 21, 26, 27ರಂದು ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಹೀಗೆಯೇ ಉತ್ತಮವಾಗಿ ಸುರಿಯಲಿ ಎಂದು ರೈತರು ಭಗಂವತನಲ್ಲಿ ಪ್ರಾರ್ಥಿಸುತ್ತಿದ್ದಾರೆ.