ಉದ್ಯಮಿಯೊಬ್ಬರು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಎರಡು ವಾಹನಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಹೇರಂಜಾಲು ಹಲಸಿನಕಟ್ಟೆಮನೆ ದಿ. ಗುಲಾಬಿ ನಾರಾಯಣ ಶೆಟ್ಟಿ ಸ್ಮರಣಾರ್ಥ ಅವರ ಪುತ್ರ ಎಚ್. ಜಯಶೀಲ ಶೆಟ್ಟಿ ಎಂಬುವವರು ಸುಳ್ಯ ಮತ್ತು ಅರೆಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸರ್ಕಾರಿ ಬಸ್ ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
ಉದ್ಯಮಿಯಾಗಿರುವ ಎಚ್. ಜಯಶೀಲ ಶೆಟ್ಟಿ ಅವರು ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಎರಡು ವಾಹನಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೇರಂಜಾಲು ಗುಡೇ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಆನಂತರ ಶಾಲೆಗಳಿಗೆ ಬಸ್ ಗಳನ್ನು ಹಸ್ತಾಂತರಿಸಲಾಯಿತು.
ಈ ವೇಳೆ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಕಿರಣ್ ಶೆಟ್ಟಿ ಮಾತನಾಡಿ, ಪ್ರಸ್ತುತ ಪೋಷಕರ ಅಭಿರುಚಿಗಿಂತ ವಿದ್ಯಾರ್ಥಿಗಳ ಅಭಿರುಚಿಗೆ ಪ್ರೋತ್ಸಾಹ ದೊರೆಯಬೇಕು ಎಂಬ ಹಿನ್ನೆಲೆಯಲ್ಲಿ ಹಿಂದುಳಿದ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಮೂಲ ಸೌಕರ್ಯದ ಕೊರತೆಯನ್ನು ಸ್ವಲ್ಪಮಟ್ಟಿಗೆ ನೀಗಿಸುವಲ್ಲಿ ಹಾಗೂ ಸಮಾಜದ ಕಟ್ಟಕಡೆಯ ಮಗು ಕೂಡ ಶಿಕ್ಷಣವನ್ನು ಪಡೆಯಬೇಕೆಂಬ ಉದ್ದೇಶದಿಂದ ನಮ್ಮ ಸಂಘದ ಅಧ್ಯಕ್ಷರು ಕೈಲಾದ ಸಹಕಾರವನ್ನು ನೀಡುತ್ತಿದ್ದಾರೆಂದು ಹೇಳಿದರು.
ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಸುಜಯ್ ಶೆಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಸೌಲಭ್ಯ ಕೊಟ್ಟಾಗ ಅಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಶೈಕ್ಷಣಿಕ ವಾತಾವರಣ ನಿರ್ಮಾಣವಾಗುತ್ತದೆ. ಅನುಭವಿ ಶಿಕ್ಷಕರ ತಂಡ, ಆಡಳಿತ ಮಂಡಳಿ ಸಹಕಾರದ ಜತೆಗೆ ಸಾಮಾಜಿಕ ಚಿಂತನೆ ಹಾಗೂ ಕಳಕಳಿ ಇದ್ದಾಗ ಮಕ್ಕಳಿಗೆ ಸಾಧನೆ ಮಾಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಅರೆಶಿರೂರು ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ, ಎಸ್ ಡಿಎಂಸಿ ಅಧ್ಯಕ್ಷ ಅಣ್ಣಪ್ಪ ಮೂರೂರು, ಮಾಜಿ ಅಧ್ಯಕ್ಷ ರಾಘವೇಂದ್ರ ಗಾಣಿಗ, ವಿಠಲ ಗೌಡ, ಸುಳ್ಯ ಶಾಲಾ ಮುಖ್ಯ ಶಿಕ್ಷಕಿ ಶಾರದಾ ದೇವಾಡಿಗ, ಎಸ್ ಡಿಎಂಸಿ ಅಧ್ಯಕ್ಷ ಸುರೇಶ ಆಚಾರ್ಯ, ಗ್ರಾಪಂ ಮಾಜಿ ಸದಸ್ಯ ಶೇಖರ ಬಳೆಗಾರ್, ಶೈಲೇಶ್ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಜೋಗ ಪೂಜಾರಿ ಸೇರಿದಂತೆ ಹಲವರು ಇದ್ದರು.