ಪಾರ್ಕ್ ನಲ್ಲಿ ಸ್ಥಾಪಿಸಲಾದ ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಮತ್ತು ಇಂಜಿನಿಯರ್ ಸಚಿನ್ ವೈ. ಕುಮಾರ್ ವಿರುದ್ಧ ನಗರ ಠಾಣೆ ಪೊಲೀಸರು 1,231 ಪುಟಗಳ ದೋಷಾರೋಪ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
2024ರ ಜೂ. 21ರಂದು ಕೃಷ್ಣ ಶೆಟ್ಟಿ ಅವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿತ್ತು. ಕೃಷ್ಣ ನಾಯ್ಕ ಅವರ “ಕ್ರಿಶ್ ಆರ್ಟ್ ವರ್ಲ್ಡ್’ ಸಂಸ್ಥೆಯು ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದಿತ್ತು. ಆದರೆ ನಕಲಿ ಕಂಚಿನ ಮೂರ್ತಿ ನಿರ್ಮಿಸಿ ಸರಕಾರಕ್ಕೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖಾ ಸಮಯದಲ್ಲಿ, ತಜ್ಞರ ಪರಿಶೀಲನೆ ವರದಿ ಮತ್ತು ತನಿಖೆಯಿಂದ ಶಿಲ್ಪಿಯು ಕಂಚಿನ ಬದಲು ಹಿತ್ತಾಳೆ ಲೋಹದಿಂದ ಮೂರ್ತಿ ನಿರ್ಮಿಸಿರುವುದು ಸಾಬೀತಾಗಿದೆ. ಅಲ್ಲದೆ ಪ್ರಾಜೆಕ್ಟ್ ಡೈರೆಕ್ಟರ್ ಮತ್ತು ಎಂಜಿನಿಯರ್ ಅವರು ವರ್ಕ್ ಆರ್ಡ್ರನಲ್ಲಿದ್ದ ಷರತ್ತುಗಳನ್ನು ಪಾಲಿಸಿಲ್ಲ. 2023ರ ಅ. 12ರಂದು ಪರಶುರಾಮ ಮೂರ್ತಿಯ ಸೊಂಟದಿಂದ ಮೇಲ್ಬಾಗವನ್ನು ಉಮಿಕಲ್ ಬೆಟ್ಟದಿಂದ ತೆಗೆದುಕೊಂಡು ಹೋಗಿ ಅಲೆವೂರು ಗ್ರಾಮದ ಪ್ರಗತಿ ನಗರದಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಸಂಬಂಧಿಸಿದ ಶೆಡ್ನಲ್ಲಿ ದಿನಾಂಕ 2024ರ ಫೆ. 25ರ ವರೆಗೆ ಇರಿಸಿಕೊಂಡಿದ್ದರು. ಆದರೆ ಮೂರ್ತಿಯ ಈ ಭಾಗವನ್ನು ಶಿಲ್ಪಿ ಕೃಷ್ಣ ನಾಯ್ಕ ಅವರಿಗೆ ಹಸ್ತಾಂತರಿಸಿದಾಗ ಅವರು ಅದನ್ನು ಬೆಂಗಳೂರಿಗೆ ಸಾಗಿಸಿರುವುದಾಗಿ ತಪ್ಪು ಮಾಹಿತಿ ನೀಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ, ಪ್ರೊಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಮತ್ತು ಎಂಜಿನಿಯರ್ ಸಚಿನ್ ವೈ. ಕುಮಾರ್ ಒಳಸಂಚು, ನಂಬಿಕೆ ದ್ರೋಹ, ವಂಚನೆ ಎಸಗಿ, ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಪೊಲೀಸರು ಆರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ.



















