ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ , ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದು, ಸದನ ಅಂಗೀಕಾರ ಮಾಡಿದೆ.
ವಿಧೇಯಕವನ್ನು ಮಂಡಿಸಿದ ಬಳಿಕ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಕರ್ನಾಟಕದಲ್ಲಿ ಬಾಲ್ಯವಿವಾಹ ಎನ್ನುವುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ತಡೆಗಟ್ಟಲು ಇದುವರೆಗೂ ಸಾಧ್ಯವಾಗಿಲ್ಲ. ಇದಕ್ಕೆ ಕಡಿವಾಣ ಹಾಕುವ ಸದುದ್ದೇಶದಿಂದ ಬಾಲ್ಯ ವಿವಾಹ ತಿದ್ದುಪಡಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಕಾರ 1828 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 1260 ಪ್ರಕರಣಗಳನ್ನು ತಡೆಯಲಾಗಿದ್ದು, ಇಂಥ ಕಠಿಣ ಕಾನೂನಿನ ಮಧ್ಯೆ 369 ಬಾಲ್ಯವಿವಾಹ ಪ್ರಕರಣಗಳು ನಡೆದಿವೆ. ಬಾಲ್ಯವಿವಾಹ ನಡೆದ ಪ್ರಕರಣಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನು ವಿವರಿಸಿದರು.
ಹೊಸ ಕಾಯ್ದೆ ನಿಯಮದ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಬಾಲ್ಯವಿವಾಹವನ್ನು ಬೇರುಮಟ್ಟದಲ್ಲೇ ಕಿತ್ತುಹಾಕಬೇಕು ಎನ್ನುವುದೇ ನಮ್ಮ ಇಲಾಖೆಯ ಮೂಲ ಉದ್ದೇಶ ಎಂದು ತಿಳಿಸಿದ್ದಾರೆ.
ವಿಧಾನಸಭೆ ವಿಧೇಯಕವನ್ನು ಅಂಗೀಕರಿಸಿತು.



















