ಬೆಂಗಳೂರು : ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಮಾಡಿರುವ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹನ್ನೆರಡು ಸೆಂಕೆಂಡಿನ ವೀಡಿಯೋ ಅದು. ಅದರ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲೆಯ ಉಸುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಮಧು ಬಂಗಾರಪ್ಪ, ಈ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪೂರ್ಣ ಅಧಿಕಾರವನ್ನು ಸರ್ಕಾರ ನೀಡಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ವಹಿಸುತ್ತದೆ. ಯಾರೇ ಆದರೂ ನಿರ್ದಾಕ್ಷ್ಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನಾವು ಇಂತ ಬೆಳವಣಿಗಳನ್ನೆಲ್ಲಾ ಒಪ್ಪುವುದಿಲ್ಲ. ನಾವು ಇಂತಹ ಘಟನೆಗಳನ್ನು ಖಂಡಿಸುತ್ತೇವೆ. ಈ ಸಂಬಂಧಿಸಿದಂತೆ ನಿನ್ನೆಯೇ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ನಾನು ಚರ್ಚಿಸಿದ್ದೇನೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಈ ರೀತಿಯ ಘಟನೆಗಳು ಪದೆ ಪದೆ ಆಗುತ್ತಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಮಾತನಾಡಿ, ಬಿಜೆಪಿಯವರಿಗೆ ಉತ್ತರ ನೀಡುವುದಕ್ಕೆ ನಾನು ಸಚಿವನಾಗಿದ್ದಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಕ್ಕೆ ಕಾನೂನಿದೆ. ನ್ಯಾಯಾಂಗ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ.



















