ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆಯೊಂದು ಬೆಳಕಿಗೆ ಬಂದಿದ್ದು, 2.62 ಲಕ್ಷ ರೂ. ಮೌಲ್ಯದ ಅಕ್ಕಿ, ಗೂಡ್ಸ್ ವಾಹನವೊಂದನ್ನು ವಶ ಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ರಾಜು ಪವಾರ್ ಬಂಧಿತ ಆರೋಪಿ, ಮತ್ತೊಬ್ಬ ಆರೋಪಿ ದೇವರಾಜ ರಾಠೋಡ್ ಪರಾರಿಯಾಗಿದ್ದಾನೆ.
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸ್ವಕ್ಷೇತ್ರವಾದ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಪಡಿತರ ಚೀಟಿ ಫಲಾನುಭವಿಗಳಿಂದ ಅಕ್ಕಿ ಖರೀದಿಸಿ, ತೆಲಂಗಾಣ ಪಾಸಿಂಗ್ ಹೊಂದಿರುವ ಗೂಡ್ಸ್ ವಾಹನದಲ್ಲಿ 2.62 ಲಕ್ಷ ರೂ. ಮೌಲ್ಯದ 158 ಚೀಲಗಳಲ್ಲಿ ಸಾಗಾಟ ಮಾಡಲಾಗುತಿತ್ತು. ಈ ವೇಳೆ ಆಹಾರ ನಿರೀಕ್ಷಕ ಬಸವರಾಜ್ ಹಾಗೂ ಪಿಎಸ್ಐ ದೇವಿಂದ್ರರೆಡ್ಡಿ ಅವರು ದಾಳಿ ನಡೆಸಿ, ಅಕ್ಕಿ ಸಹಿತ ಗೂಡ್ಸ್ ವಾಹನವನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಗೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಚಾಮನಾಳ ತಾಂಡಾದ ವ್ಯಾಪ್ತಿಯ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿರುವ ಪಡಿತರ ಅಕ್ಕಿಯನ್ನು ಖರೀದಿ ಮಾಡಿ, ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡಲಾಗುತಿತ್ತು ಎಂದು ತಿಳಿದು ಬಂದಿದೆ.
ಇತ್ತೀಚಿಗೆ ಗುರುಮಠಕಲ್ನಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆಯಾಗಿತ್ತು. ಅಲ್ಲದೇ ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ ಎಂದು ತಿಳಿದು ಬಂದಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದರೂ ಕೂಡ ಜಿಲ್ಲೆಯಲ್ಲಿ ಅಕ್ಕಿ ಸಾಗಾಟ ದಂಧೆ ನಿಲ್ಲುತ್ತಿಲ್ಲ.