ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳು ಮತ್ತಷ್ಟು ಹಿಂಸಾರೂಪಕ್ಕೆ ತಿರುಗಿದ್ದು, ಪಾಕಿಸ್ತಾನಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಗುರುವಾರ ಕನಿಷ್ಠ 12 ನಾಗರಿಕರು ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ, ಪಾಕ್ ಸೇನೆ ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದ್ದು, ಈ ಪ್ರದೇಶವು ರಣರಂಗವಾಗಿ ಮಾರ್ಪಾಡಾಗಿದೆ.
38 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಲ್ಲಿ ಪಾಕಿಸ್ತಾನ ಸರ್ಕಾರ ವಿಫಲವಾದ ಕಾರಣ ಆರಂಭವಾದ ಈ ಪ್ರತಿಭಟನೆಗಳು, ಸೇನೆಯ ದೌರ್ಜನ್ಯದ ವಿರುದ್ಧದ ವ್ಯಾಪಕ ಆಂದೋಲನವಾಗಿ ಮಾರ್ಪಟ್ಟಿವೆ. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಗುಂಡಿನ ದಾಳಿ ಮತ್ತು ಅಶ್ರುವಾಯು ಪ್ರಯೋಗಿಸಿವೆ.

ವರದಿಗಳ ಪ್ರಕಾರ, ಮುಜಫರಾಬಾದ್ನಲ್ಲಿ ಐವರು, ಧೀರ್ಕೋಟ್ನಲ್ಲಿ ಐವರು ಮತ್ತು ದಡ್ಯಾಲ್ನಲ್ಲಿ ಇಬ್ಬರು ಪ್ರತಿಭಟನಾಕಾರರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಇದಲ್ಲದೆ, ಮೂವರು ಪೊಲೀಸ್ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ. ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪಾಕಿಸ್ತಾನ ಸರ್ಕಾರವು ಸಾವಿರಾರು ಹೆಚ್ಚುವರಿ ಸೈನಿಕರನ್ನು ಈ ಪ್ರದೇಶಕ್ಕೆ ರವಾನಿಸಿದೆ.
“ಪ್ರತಿಭಟನೆಯ ಹಿಂದಿನ ಕಾರಣಗಳು”
ಜಮ್ಮು ಕಾಶ್ಮೀರ ಜಂಟಿ ಅವಾಮಿ ಆಕ್ಷನ್ ಕಮಿಟಿ (AAC) ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಮುಷ್ಕರಕ್ಕೆ ಕರೆ ನೀಡಿದಾಗಿನಿಂದ ಪ್ರದೇಶದಾದ್ಯಂತ ಜನಜೀವನ ಸಂಪೂರ್ಣ ಸ್ಥಗಿತಗೊಂಡಿದೆ. ಪಾಕಿಸ್ತಾನದಲ್ಲಿ ವಾಸಿಸುತ್ತಿರುವ ಕಾಶ್ಮೀರಿ ನಿರಾಶ್ರಿತರಿಗಾಗಿ ಪಿಒಕೆ ವಿಧಾನಸಭೆಯಲ್ಲಿ ಮೀಸಲಿಡಲಾಗಿರುವ 12 ಸ್ಥಾನಗಳನ್ನು ರದ್ದುಗೊಳಿಸಬೇಕುಸ ತೆರಿಗೆ ವಿನಾಯಿತಿ, ಹಿಟ್ಟು ಮತ್ತು ವಿದ್ಯುತ್ ಮೇಲೆ ಸಬ್ಸಿಡಿ ನೀಡಬೇಕು,ಅಭಿವೃದ್ಧಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟು ಈ ಪ್ರತಿಭಟನೆ ನಡೆಸಲಾಗುತ್ತಿದೆ.
ಸೆ.29 ರಿಂದಲೇ ಮಾರುಕಟ್ಟೆಗಳು, ಅಂಗಡಿಗಳು ಮತ್ತು ಸ್ಥಳೀಯ ವ್ಯವಹಾರಗಳು ಮುಚ್ಚಲ್ಪಟ್ಟಿವೆ. ಅಲ್ಲದೆ, ಮೊಬೈಲ್, ಇಂಟರ್ನೆಟ್ ಮತ್ತು ಸ್ಥಿರ ದೂರವಾಣಿ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
“ಪಾಕ್ ಸರ್ಕಾರ ಮತ್ತು ಸೇನೆಯ ವಿರುದ್ಧ ಆಕ್ರೋಶ”
“ಆಳುವವರೇ ಎಚ್ಚರ, ನಾವೇ ನಿಮ್ಮ ಅಂತ್ಯ” ಮತ್ತು “ಕಾಶ್ಮೀರ ನಮ್ಮದು, ಅದರ ಭವಿಷ್ಯವನ್ನು ನಾವೇ ನಿರ್ಧರಿಸುತ್ತೇವೆ” ಎಂಬಂತಹ ಘೋಷಣೆಗಳು ಪ್ರತಿಭಟನೆಯುದ್ದಕ್ಕೂ ಕೇಳಿಬಂದಿವೆ. ದಶಕಗಳಲ್ಲಿ ಇದೇ ಮೊದಲ ಬಾರಿಗೆ ಪಿಒಕೆ ನಾಗರಿಕರು ಪಾಕಿಸ್ತಾನ ಸರ್ಕಾರ ಮತ್ತು ಸೇನೆಯನ್ನು ನೇರವಾಗಿ ಗುರಿಯಾಗಿಸಿಕೊಂಡು ಪ್ರತಿಭಟನೆ ನಡೆಸುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ.
“ಅಂತಾರಾಷ್ಟ್ರೀಯ ಮಧ್ಯಸ್ಥಿಕೆಗೆ ಮನವಿ”
ಈ ಮಧ್ಯೆ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಸಮಿತಿಯೊಂದನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಮತ್ತೊಂದೆಡೆ, ಯುನೈಟೆಡ್ ಕಾಶ್ಮೀರ್ ಪೀಪಲ್ಸ್ ನ್ಯಾಷನಲ್ ಪಾರ್ಟಿಯ ವಕ್ತಾರ ನಾಸಿರ್ ಅಜೀಜ್ ಖಾನ್, ಪಿಒಕೆಯಲ್ಲಿನ ಮಾನವೀಯ ಬಿಕ್ಕಟ್ಟನ್ನು ತಡೆಯಲು ವಿಶ್ವಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಬೇಕೆಂದು ಮನವಿ ಮಾಡಿದ್ದಾರೆ.



















