ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕಳೆದ ರಾತ್ರಿ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1.5), ವೃಂದಾ (4) ಹಾಗೂ ತಾಯಿ ವಿಜಲಕ್ಷ್ಮೀ ಮೃತ ದುರ್ದೈವಿಗಳು.
ಇಬ್ಬರು ಮಕ್ಕಳನ್ನ ಸಾಯಿಸಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ವಿಜಯಲಕ್ಷ್ಮಿ ಗಂಡ ಖಾಸಗಿ ಮಾಲ್ನಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ವಿಜಯಲಕ್ಷ್ಮಿ ತಂಗಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇವರು ಮೂಲತಃ ರಾಯಚೂರು ಜಿಲ್ಲೆಯವರು. ಸಾವಿನ ಬಗ್ಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ವೇಳೆ ಪತಿ ಎಲ್ಲಿದ್ದ ಅನ್ನೋದ್ರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಮದುವೆಯಾಗಿ ಐದು ವರ್ಷವಾಗಿತ್ತು. ಕೌಟುಂಬಿಕ ಸಮಸ್ಯೆ ಹಿನ್ನೆಲೆ ಈ ರೀತಿ ಮಾಡಿಕೊಂಡ್ರಾ ಅನ್ನೋದ್ರ ಬಗ್ಗೆ ತನಿಖೆ ನಡೆಯುತ್ತಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















