ದೆಹಲಿ : ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿರುವ ಕೋರ್ಟ್, ನವೆಂಬರ್ 3ರಂದು ನಡೆಯಲಿರುವ ಮುಂದಿನ ವಿಚಾರಣೆಗೆ ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.
2023ರ ಪ್ರಾಣಿ ಜನನ ನಿಯಂತ್ರಣ ನಿಯಮಗಳ ಅನುಷ್ಠಾನದ ಕುರಿತು ಅಫಿಡವಿಟ್ ಸಲ್ಲಿಸದ ರಾಜ್ಯಗಳ ಬಗ್ಗೆ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ನಿಂದ ನೋಟಿಸ್ ಜಾರಿ ಮಾಡಲಾಗಿದೆ.
ಕರ್ನಾಟಕ ಮಾತ್ರವಲ್ಲದೆ ದೇಶದ ಬಹುತೇಕ ರಾಜ್ಯಗಳಲ್ಲಿ ಬೀದಿ ನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚಿರೋದನ್ನು ಮನಗಂಡ ಸುಪ್ರೀಂಕೋರ್ಟ್ ಈ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದೆ. ಹೀಗಾಗಿ ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಲಾಗಿತ್ತು. ಆದರೆ ಮೂರು ರಾಜ್ಯಗಳನ್ನು ಹೊರತುಪಡಿಸಿ ಉಳಿದವರು ಈ ಬಗ್ಗೆ ಮಾಹಿತಿ ನೀಡದ ಕಾರಣ ಕೋರ್ಟ್ ಗರಂ ಆಗಿದ್ದು, ಈ ಬಗ್ಗೆ ಇದೀಗ ಖಡಕ್ ಸೂಚನೆ ರವಾನಿಸಿದೆ.
ಇದನ್ನೂ ಓದಿ : ಬಸ್ ರಿವರ್ಸ್ ತೆಗೆಯುವಾಗ ಮಹಿಳೆಯರಿಗೆ ಡಿಕ್ಕಿ | ಒರ್ವ ಮಹಿಳೆ ಸಾವು



















