ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅತ್ಯಾಚಾರಿಗಳು ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಾರಾಗೃಹದಲ್ಲಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಆರೋಪಿಸಿದ್ದಾರೆ.
ಇಂದು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು. ಭಯೋತ್ಪಾದಕರು ಕೇವಲ ಕಾರಾಗೃಹದಲ್ಲಿ ಮಾತ್ರವಷ್ಟೇ ಇಲ್ಲ, ಅವರಿಗಿಂತ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲೂ ಇದ್ದಾರೆ, ಅವರು ಯಾರು ಎನ್ನುವುದು ನನಗಿಂತ ಹೆಚ್ಚಾಗಿ ನಿಮಗೆ ಗೊತ್ತಿದೆ ಎಂದಿದ್ದಾರೆ.
ರಾಜ್ಯದ ಜನ ಈ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹಳೆಯ ವಿಚಾರವಲ್ಲ. ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದರು. ಆಮೇಲೆ ಇನ್ನೊಂದು ಪ್ರಕರಣದಲ್ಲಿ ಸ್ವತಃ ನ್ಯಾಯಾಲಯಗಳೇ ಇಂಥ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು. ಅದಾದ ನಂತರ ಮತ್ತೆ ಅಂಥವೇ ಪ್ರಕರಣಗಳು ಜೈಲಿನಲ್ಲಿ ಮರುಕಳಿಸುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಗುರುತರ ಅಪರಾಧ ಮಾಡಿದವರಿಗೆ ಎಲ್ಲ ರೀತಿಯ ಸೌಲಭ್ಯ ಕೊಟ್ಟಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದು ಹೊಸದಾಗಿ ಶುರುವಾದುದಲ್ಲ. ವಿಧಾನಸೌಧದಲ್ಲಿ ಉಗ್ರರನ್ನು ಇಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಉಗ್ರರ ಬಗ್ಗೆ ಏನು ಚರ್ಚೆ ಮಾಡುವುದು? ನೀವು ಯಾರ ಬಗ್ಗೆ ತನಿಖೆ ಮಾಡ್ತೀರಿ? ಇವೆಲ್ಲಾ ಕಾಲಹರಣ, ಸಮಯ ವ್ಯರ್ಥ ಮಾಡುವುದಕ್ಕೆ ನಡೆಯುತ್ತಿರುವ ತನಿಖೆಯಷ್ಟೇ ಎಂದು ಟೀಕಿಸಿದ್ದಾರೆ.
ಜೈಲು ನಿರ್ವಹಣೆಯಲ್ಲಿ ಪದೇ ಪದೇ ನಡೆಯುತ್ತಿರುವ ವೈಫಲ್ಯಗಳ ಬಗ್ಗೆ ಮಾಧ್ಯಮಗಳು ಹಾಗೂ ಜನರು ಮುಖ್ಯಮಂತ್ರಿ, ಗೃಹ ಸಚಿವರನ್ನು ಕೇಳಬೇಕು, ಪ್ರಶ್ನಿಸಬೇಕು. ಪ್ರತಿ ದಿನವೂ ಈ ಸರ್ಕಾರದ ವೈಪಲ್ಯ ಎದ್ದು ಕಾಣಿಸುತ್ತಿದೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಹಾಕುತ್ತಾರೆ. ಆದರೆ ಇವರಿಗೇನಿದೆ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂದು ಪ್ರಶ್ನಿಸಿದ್ದಾರೆ.
ಸಿಎಂ ಅವರಿಗೆ ದೀರ್ಘ ಅನುಭವ ಇದೆ. ಇಷ್ಟು ಅನುಭವ ಇಟ್ಟುಕೊಂಡು ಇಷ್ಟೆಲ್ಲಾ ಲಘುವಾಗಿ ತೆಗೆದುಕೊಳ್ಳುವುದು ಎಷ್ಟು ಸರಿ? ಮುಖ್ಯಮಂತ್ರಿಗಳಿಗೆ ಗುಪ್ತದಳ ಎನ್ನುವುದು ಇರುವುದಿಲ್ಲವೇ? ಇವರೇ ಕೆಟ್ಟ ಶಕ್ತಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ | ಅಧಿಕಾರಿಗಳ ತಲೆದಂಡ!



















