ಉಡುಪಿ: ಜಿಲ್ಲೆಯ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ನೆಡೆಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಮಂಡಳಿ ಅಧ್ಯಕ್ಷ ಎಮ್.ಎ.ಗಫೂರ್ ಹೇಳಿದರು. ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು.
ಉಡುಪಿಯ 5, ದಕ್ಷಿಣ ಕನ್ನಡದ 8 ಹಾಗೂ ಉತ್ತರ ಕನ್ನಡದ 6 ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 19 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಂತೆ ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಆಗಿದೆ. ಈ ಹಿಂದೆ ಮಲೆನಾಡು ಅಭಿವೃದ್ಧಿ ಮಂಡಳಿಯಲ್ಲಿದ್ದ ಕಾರ್ಕಳ, ಬೆಳ್ತಂಗಡಿ, ಮೂಡಬಿದ್ರೆ, ಸುಳ್ಯ ಹಾಗೂ ಪುತ್ತೂರು ಕರಾವಳಿ ಅಭಿವೃದ್ಧಿ ಮಂಡಳಿಗೆ ಸೇರಿದೆ. ಕರಾವಳಿಯ ವಿವಿಧ ಅಭಿವೃದ್ಧಿ ಇಲಾಖೆಗಳು, ಜಿಲ್ಲಾ ಪಂಚಾಯತಿಗಳು ಮತ್ತು ಮಂಡಳಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳು ಯೋಜನೆಗೆ ಅನುಸಾರವಾಗಿ ರೂಪಿಸಿದ ಕಾರ್ಯಕ್ರಮಗಳನ್ನು ಮಂಡಳಿಯು ಅನುಮೋದಿಸಲಿದೆ ಎಂದರು.
ರಾಜ್ಯವು 320 ಕಿ.ಮೀ ಉದ್ದದ ಕರಾವಳಿ ತೀರವನ್ನು ಹೊಂದಿರುವುದರಿಂದ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಬಂದರು ಅಭಿವೃದ್ಧಿ, ಬೀಚ್ಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮತ್ತಷ್ಟು ಹೆಚ್ಚಿನ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಹಿನ್ನೀರು ಪ್ರದೇಶಗಳ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ಕಾರ್ಯರೂಪಕ್ಕೆ ತರುವುದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲಾಗುವುದು ಎಂದರು
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಅಂತಾರಾಷ್ಟೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಂದಿಕೂರು ಬೆಳಪು ಪರಿಸರದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಿರ್ಮಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು, ಅತ್ಯಾಧುನಿಕ ಮೂಲಭೂತ ಸೌಕರ್ಯದೊಂದಿಗೆ ಹೆಚ್ಚು ಪ್ರೇಕ್ಷಕರು ಆಸೀನರಾಗಲು ಹಾಗೂ ಸಾವಿರಾರು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಕೆ.ಎಸ್.ಸಿ.ಎ ಅವರು ಸ್ಥಳ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮೊದಲ ಹಂತದಲ್ಲಿ ಓವರ್ ಹೆಡ್ ಮೆಟ್ರೋ ಕಾಮಗಾರಿ ಯೋಜನೆಯನ್ನು ಮಂಗಳೂರು-ಉಡುಪಿ-ಮಣಿಪಾಲ ಮಾರ್ಗವಾಗಿ ಹಾಗೂ ಎರಡನೇ ಹಂತದಲ್ಲಿ ಹೆಜಮಾಡಿ-ಕಾರ್ಕಳ ಮಾರ್ಗವಾಗಿ ಕೈಗೊಳ್ಳಲು ಯೋಜನೆ ರೂಪಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ: ವಿದ್ಯಾರ್ಥಿಗಳ ಜನಿವಾರ, ಕೈದಾರ ತೆಗೆಸಿದ ದೈಹಿಕ ಶಿಕ್ಷಣ ಶಿಕ್ಷಕ ವಜಾ



















