ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.
ಬಿಎಸ್ವೈ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂತ್ರಾ ಅವರು ಹೈಕೋರ್ಟ್ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ ಸಿಐಡಿಗೆ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್ವೈ ಹೈಕೋರ್ಟ್ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಪ್ರಕರಣದ ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್ ನ್ಯಾಯಾಲಯವು ಇಂದು (ಡಿ.2) ಕೋರ್ಟ್ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.
ಏನಿದು ಪ್ರಕರಣ?
ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024ರಲ್ಲಿ ಸಿಐಡಿ 750 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.
ಈ ಪ್ರಕರಣದಲ್ಲಿ ದೂರು ನೀಡಿದ್ದ ಬಾಲಕಿಯ ತಾಯಿ ಮತ್ತು ಆ ಬಾಲಕಿ ಇಬ್ಬರೂ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ. ಬಾಲಕಿಯ ತಾಯಿ ಮೇ 26, 2024ರಂದು ನಿಧನರಾದರು.
ಇದನ್ನೂ ಓದಿ : ಸ್ಮಾರ್ಟ್ ಮೀಟರ್ ಹಗರಣ ಕೇಸ್ | ಸಚಿವ ಕೆ.ಜೆ. ಜಾರ್ಜ್ಗೆ ಬಿಗ್ ರಿಲೀಫ್.. ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್!



















