ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ ಎದುರಾಗಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದನ್ನು ಪ್ರಶ್ನಿಸಿದ ಪ್ರಜ್ವಲ್ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಇದೀಗ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸೆಪ್ಟೆಂಬರ್ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಕುರಿತು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ತಿಳಿದು ಬಂದಿದೆ.
ಅತ್ಯಾಚಾರ ಪ್ರಕರಣದಲ್ಲೇನಾಗಿತ್ತು?
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಗನ್ನಿಕಾಡದ ತೋಟದ ಮನೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಮೇಲೆ ಪ್ರಜ್ವಲ್ ರೇವಣ್ಣ ಶಿಕ್ಷೆಗೆ ಒಳಗಾಗಿದ್ದರು. 2021ರಲ್ಲಿ ಹಾಸನದ ತೋಟದ ಮನೆ ಮತ್ತು ಬೆಂಗಳೂರಿನ ನಿವಾಸದಲ್ಲಿ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ನಡೆದಿದ್ದು, ಆರೋಪಿಯು ಈ ಕೃತ್ಯವನ್ನು ತನ್ನ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆಂದು ಹೇಳಲಾಗಿತ್ತು. ಆಗಸ್ಟ್ 2ರಂದು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಶಿಕ್ಷೆಗೊಳಗಾದ ಪ್ರಜ್ವಲ್ಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ, ಅವರಿಗೆ ಒಟ್ಟು 11.50 ಲಕ್ಷ ರೂ. ದಂಡ ವಿಧಿಸಿದ್ದರು ಮತ್ತು ಈ ದಂಡದ ಮೊತ್ತದಲ್ಲಿ ರೂ. 11.25 ಲಕ್ಷವನ್ನು ಸಂತ್ರಸ್ತೆಗೆ ಪಾವತಿಸುವಂತೆ ಹೇಳಿದ್ದರು.
ಮಹಿಳೆಯ ಆರೋಪವನ್ನು ಅಲ್ಲಗಳೆದಿದ್ದ ಪ್ರಜ್ವಲ್ ರೇವಣ್ಣ, ಮಹಿಳೆ 3 ವರ್ಷದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಟೋರ್ ರೂಮಿನಲ್ಲಿ ಬಟ್ಟೆ, ಕೂದಲಿದ್ದ ಬ್ಯಾಗ್ ಅನ್ನು ಮಹಿಳೆ ಗುರುತಿಸಿಲ್ಲ. ಬ್ಯಾಟರಿ, ಪೇಂಟ್ ಇದ್ದ ರೂಮಿನಲ್ಲಿ ಮಹಿಳೆಯ ಉಡುಪು ಸಿಕ್ಕಿತೆಂದು ಹೇಳಿದ್ದಾರೆ. ಲಾಕ್ ಆಗಿದ್ದ ರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ವಿಡಿಯೋ ಇತ್ತೆಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ ಎಂದು ಹತ್ತಾರು ಪ್ರಶ್ನೆಗಳನ್ನೆತ್ತಿದ್ದರು. ಅಲ್ಲದೇ ಶಿಕ್ಷೆ ರದ್ದುಪಡಿಸುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿರುವ ಮೇಲ್ಮನವಿಯನ್ನೂ ಸಲ್ಲಿಸಿದ್ದರು.
ಇದನ್ನೂ ಓದಿ : ಹೊಸ ವರ್ಷ ಹಿನ್ನೆಲೆ ಬೆಂಗಳೂರಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಬೇಟೆ | 28.75 ಕೋಟಿ ಮೌಲ್ಯದ ಗಾಂಜಾ ಸೀಜ್



















