ಧರ್ಮಪುರಿ (ತಮಿಳುನಾಡು): ತಮಿಳುನಾಡಿನಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷದ ಕಾರ್ಯಕರ್ತರು ಅಕ್ರಮ ಬಾರ್ ಒಂದರ ವಿರುದ್ಧ ನಡೆಸುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಕಾರ್ಯಕರ್ತನೊಬ್ಬ ಪೊಲೀಸ್ ಅಧಿಕಾರಿಯ ಕೈ ಕಚ್ಚಲು ಯತ್ನಿಸಿದ ಘಟನೆ ನಡೆದಿದೆ.
ಧರ್ಮಪುರಿಯ ಮನರಂಜನಾ ಕೇಂದ್ರವೊಂದರಲ್ಲಿ ಅಕ್ರಮವಾಗಿ ಮದ್ಯದ ಬಾರ್ ನಡೆಸಲಾಗುತ್ತಿದೆ ಎಂದು ಆರೋಪಿಸಿ ಟಿವಿಕೆ ಪಕ್ಷದ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪಕ್ಷದ ಪದಾಧಿಕಾರಿ ಶಿವ ಅವರ ಪ್ರಕಾರ, “ಕಳೆದ 15 ದಿನಗಳಿಂದ ನಾವು ಪ್ರತಿಭಟನೆಗೆ ಅನುಮತಿ ಕೋರುತ್ತಿದ್ದೆವು. ಇಲ್ಲಿನ ಮನರಂಜನಾ ಕೇಂದ್ರವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಮತ್ತು ಹತ್ತಿರದಲ್ಲೇ ಸರ್ಕಾರಿ ಟಾಸ್ಮಾಕ್ ಬಾರ್ ಇದ್ದರೂ, ಇಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ,” ಎಂದು ಆರೋಪಿಸಿದ್ದಾರೆ.
ಪೊಲೀಸರೊಂದಿಗೆ ವಾಗ್ವಾದ, ನೂಕುನುಗ್ಗಲು
ಶಾಂತಿಯುತವಾಗಿ ಆರಂಭವಾಗಬೇಕಿದ್ದ ಪ್ರತಿಭಟನೆ, ಕಾರ್ಯಕರ್ತರು ಬಲವಂತವಾಗಿ ಕೇಂದ್ರದ ಆವರಣದೊಳಗೆ ನುಗ್ಗಲು ಯತ್ನಿಸಿದಾಗ ಉದ್ವಿಗ್ನಗೊಂಡಿತು. ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಅವರನ್ನು ತಡೆಯಲು ಮುಂದಾದಾಗ ಮಾತಿನ ಚಕಮಕಿ ನಡೆದಿದೆ. ಘೋಷಣೆಗಳನ್ನು ಕೂಗುತ್ತಾ ಕಾರ್ಯಕರ್ತರು ಪೊಲೀಸರನ್ನು ತಳ್ಳಿ ಮುನ್ನುಗ್ಗಲು ಪ್ರಯತ್ನಿಸಿದ್ದಾರೆ.
ಕ್ಯಾಮೆರಾದಲ್ಲಿ ಸೆರೆಯಾಯ್ತು ಕಚ್ಚುವ ದೃಶ್ಯ!
ಈ ಗದ್ದಲದ ನಡುವೆ ಟಿವಿಕೆ ಪಕ್ಷದ ಕಾರ್ಯಕರ್ತನೊಬ್ಬ ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರ ಕೈಯನ್ನು ಕಚ್ಚಲು ಪ್ರಯತ್ನಿಸಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಪೊಲೀಸ್ ಅಧಿಕಾರಿ ತಕ್ಷಣವೇ ತಮ್ಮ ಕೈಯನ್ನು ಹಿಂದಕ್ಕೆ ಎಳೆದುಕೊಂಡಿದ್ದರಿಂದ ಪಾರಾಗಿದ್ದಾರೆ. ಈ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪೊಲೀಸರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದವರ ಬಗ್ಗೆ ಮಾಹಿತಿ ನೀಡುತ್ತಿಲ್ಲ ಮತ್ತು ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರತಿಭಟನೆ ನಡೆಸಲಾಗಿದೆ ಎಂದು ಟಿವಿಕೆ ಮುಖಂಡರು ಸಮರ್ಥಿಸಿಕೊಂಡಿದ್ದಾರೆ. ಆದರೆ, ಕಾರ್ಯಕರ್ತರ ವರ್ತನೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.
ಇದನ್ನೂ ಓದಿ: ರಾಜ್ಯದ ಜ್ವಲಂತ ಸಮಸ್ಯೆಗಳು ಸದನದಲ್ಲಿ ಚರ್ಚೆಯಾಗಬೇಕು, ಆದ್ರೆ ಈ ಸರ್ಕಾರ ನಿಷ್ಕ್ರಿಯಗೊಂಡಿದೆ | ವಿಜಯೇಂದ್ರ



















