ಹೈದರಾಬಾದ್: ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನಗೊಂಡ ಪಾಪಿ ಪತಿಯೊಬ್ಬ ತನ್ನ ಪತ್ನಿಗೆ ಮಕ್ಕಳ ಎದುರೇ ಬೆಂಕಿ ಹಚ್ಚಿ ಕೊಲೆಗೈದಿರುವ ಅಮಾನವೀಯ ಘಟನೆ ಹೈದರಾಬಾದ್ನ ನಲ್ಲಕುಂಟಾ ಪ್ರದೇಶದಲ್ಲಿ ನಡೆದಿದೆ. ತಾಯಿಯನ್ನು ರಕ್ಷಿಸಲು ಬಂದ ಮಗಳನ್ನೂ ಆತ ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ.
ಮೃತ ಮಹಿಳೆಯನ್ನು ತ್ರಿವೇಣಿ ಎಂದು ಗುರುತಿಸಲಾಗಿದೆ. ಆರೋಪಿ ವೆಂಕಟೇಶ್ ಪ್ರಸ್ತುತ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ವೆಂಕಟೇಶ್ ಮತ್ತು ತ್ರಿವೇಣಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ (ಒಬ್ಬ ಮಗ ಮತ್ತು ಒಬ್ಬ ಮಗಳು). ವೆಂಕಟೇಶ್ ತನ್ನ ಪತ್ನಿಯ ಚಾರಿತ್ರ್ಯದ ಬಗ್ಗೆ ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದೇ ವಿಚಾರವಾಗಿ ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಪತಿಯ ಕಿರುಕುಳ ತಾಳಲಾರದೆ ತ್ರಿವೇಣಿ ಇತ್ತೀಚೆಗೆ ತವರು ಮನೆಗೆ ಹೋಗಿದ್ದರು. ಆದರೆ, ತಾನು ಬದಲಾಗುವುದಾಗಿ ನಂಬಿಸಿದ ವೆಂಕಟೇಶ್, ಆಕೆಯನ್ನು ಮರಳಿ ಮನೆಗೆ ಕರೆತಂದಿದ್ದ.
ಕ್ರಿಸ್ಮಸ್ ಹಬ್ಬದ ಮುನ್ನಾದಿನವಾದ ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ ನಡೆಸಿದ ವೆಂಕಟೇಶ್, ಆಕೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಕ್ಕಳ ಕಣ್ಣೆದುರೇ ತಾಯಿ ಬೆಂಕಿಯಲ್ಲಿ ಬೇಯಲಾರಂಭಿಸಿದ್ದಾರೆ. ಈ ವೇಳೆ ತಾಯಿಯನ್ನು ರಕ್ಷಿಸಲೆಂದು ಅವರ ಮಗಳು ಧಾವಿಸಿದಾಗ, ಆಕೆಯನ್ನೂ ಕ್ರೂರಿ ತಂದೆ ಬೆಂಕಿಗೆ ತಳ್ಳಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ.
ಮಕ್ಕಳ ಚೀರಾಟ ಕೇಳಿ ಸ್ಥಳಕ್ಕಾಗಮಿಸಿದ ನೆರೆಹೊರೆಯವರು ಬೆಂಕಿ ನಂದಿಸಲು ಯತ್ನಿಸಿದರಾದರೂ, ಗಂಭೀರವಾಗಿ ಗಾಯಗೊಂಡಿದ್ದ ತ್ರಿವೇಣಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ವೆಂಕಟೇಶ್ನಿಗಾಗಿ ಬಲೆ ಬೀಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಬೈಕ್ಗೆ ಗುದ್ದಿ ಕಿಲೋಮೀಟರ್ಗಟ್ಟಲೆ ರಸ್ತೆ ಮೇಲೆ ಬೈಕ್ ಎಳೆದೊಯ್ದ ಕಾರು ಚಾಲಕ



















