ಬೆಂಗಳೂರು : ಕರ್ನಾಟಕ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಇಂದು ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದೆ. ಈ ಸಮಾವೇಶಕ್ಕೆ ಸ್ವಯಂ ಪ್ರೇರಿತವಾಗಿ ಜನರು ಬರಲು ಸಾಧ್ಯವಿಲ್ಲ ಎಂದು ಅರಿತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನಿನಲ್ಲಿ ಇರುವ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಮಾಡಿದ್ದಾರೆ” ಎಂದು ಟೀಕಿಸಿದ್ದಾರೆ.
“ನಮ್ಮ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ನಾವು ಅಕ್ರಮ ಇದ್ದದ್ದನ್ನು ಸಕ್ರಮ ಮಾಡಿದ್ದೇವೆ. ಅದರ ಮುಖಾಂತರ ಸಾಲ ಸಿಗುವ ವ್ಯವಸ್ಥೆ ಮಾಡಿದ್ದೇವೆ. ಈಗ ಜನರ ಆಸ್ತಿಯನ್ನು ಅವರೇ ಕೊಂಡುಕೊಳ್ಳುವ ವ್ಯವಸ್ಥೆ ಮಾಡಿ ಕಾಂಗ್ರೆಸ್ ಸರ್ಕಾರ ಬರಿದಾದ ಖಜಾನೆ ತುಂಬಲು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಾ ಶುಲ್ಕವನ್ನು ಬಡವರ ತಲೆ ಮೇಲೆ ಹೇರಿದೆ. ಒಬ್ಬ ಬಡವ 3-4 ಲಕ್ಷ ಕಟ್ಟುವ ಪರಿಸ್ಥಿತಿ ಬಂದಿದೆ. ಅಷ್ಟೇ ಅಲ್ಲ, ಈ ವ್ಯವಸ್ಥೆ ಮಾಡಲು ಕಂದಾಯ ಇಲಾಖೆಯಲ್ಲಿ ಬಹಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಭ್ರಷ್ಟಾಚಾರದ ಸಾಧನೆಯ ಸಮಾವೇಶ. ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ಈ ಸರ್ಕಾರ ಕೊಡುತ್ತಿದೆ” ಎಂದಿದ್ದಾರೆ.
“ಇದೇ ಜಾಗದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ ಅಡಿಯಲ್ಲಿ ಯಾವುದೇ ಮನೆಗಳನ್ನು ಕಟ್ಟುವ ಪ್ರಕ್ರಿಯೆ ರಾಜ್ಯದಲ್ಲಿ ನಡೆಯುತ್ತಿಲ್ಲ. ಒಂದು ಸಾವಿರ ದಿವಸದ ವ್ಯರ್ಥ ಆಡಳಿತದ ಶೂನ್ಯ ಸಾಧನೆಯ ಈ ಸಮಾವೇಶವನ್ನು ಬಡವರು ಹಿಡಿ ಶಾಪ ಹಾಕುತ್ತಿರುವುದು ಸತ್ಯ. ಇದು ಅತ್ಯಂತ ಖಂಡನೀಯ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ತೆಗೆಯೋದೇ ನನ್ನ ಅಜೆಂಡಾ | ಹೆಚ್.ಡಿ.ಕುಮಾರಸ್ವಾಮಿ


















