ಮೈಸೂರು: ಮೈಸೂರುನಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿವಾದ ಎದ್ದಿದ್ದು, ಮಾಜಿ ಆಯುಕ್ತ ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ವಿಚಾರವಾಗಿ ಸ್ನೇಹಮಯಿ ಕೃಷ್ಣ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಮುಡಾ ಪ್ರಕರಣದಲ್ಲಿ ಆರೋಪಿಯಾಗಿರುವ ನಟೇಶ್ ಅವರಿಗೆ ಮುಂಬಡ್ತಿ ನೀಡುವ ವಿಚಾರವು ತಮಗೆ ಮೂರು ದಿನಗಳ ಮುಂಚೆಯೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ. ಕೋಟ್ಯಂತರ ರೂಪಾಯಿ ಹಣ ಪಡೆದು ಮುಂಬಡ್ತಿ ನೀಡಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಹಣ ಸಂದಾಯ ಮಾಡಲಾಗಿದೆ ಎಂದು ಆರೋಪಿಸಿರುವ ಸ್ನೇಹಮಯಿ ಕೃಷ್ಣ, ಇದಕ್ಕೆ ಸಂಬಂಧಿಸಿದ ದಾಖಲೆಗಳು ತಮ್ಮ ಬಳಿ ಇವೆ ಎಂದು ತಿಳಿಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.
ಮುಡಾದಲ್ಲಿ ಆಯುಕ್ತರಾಗಿದ್ದ ದಿನೇಶ್ ಅವರನ್ನು ಅಮಾನತು ಮಾಡಲಾಗುತ್ತದೆ. ಅದೇ ವೇಳೆ ನಟೇಶ್ ಅವರಿಗೆ ಮುಂಬಡ್ತಿ ನೀಡಲಾಗುತ್ತದೆ. ಇದರ ಹಿಂದೆ ಹಣದ ವಹಿವಾಟು ನಡೆದಿದೆ ಎಂಬುದನ್ನೂ ಕೋರ್ಟ್ನಲ್ಲಿ ವಿವರಿಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಈ ಕುರಿತು ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದೇನೆ. ಹಣ ಪಡೆದು ಮುಂಬಡ್ತಿ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಲಿ ಎಂದು ಸ್ನೇಹಮಯಿ ಕೃಷ್ಣ ಸವಾಲು ಹಾಕಿದ್ದಾರೆ.
ಈ ಆರೋಪಗಳ ಕುರಿತು ಇನ್ನೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಪ್ರಕರಣ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ



















