ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 8 ಮಂದಿ ಶಂಕಿತ ಉಗ್ರರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಈ ಗುಂಪು ಭಾರತದ ಹಲವೆಡೆ ದಾಳಿಗೆ ಯೋಜನೆ ರೂಪಿಸಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಂದಿದೆ.
ಬಂಧಿತ 8 ಮಂದಿಯ ಪೈಕಿ ಆರು ಜನರನ್ನು ತಮಿಳುನಾಡಿನ ತಿರುಪುರ್ ಜಿಲ್ಲೆಯ ಗಾರ್ಮೆಂಟ್ಸ್ ಉತ್ಪಾದನಾ ಘಟಕಗಳಿಂದ ವಶಕ್ಕೆ ಪಡೆಯಲಾಗಿದೆ. ಇವರನ್ನು ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದ್ದು, ಈ ಪೈಕಿ ಒಬ್ಬ ಬಾಂಗ್ಲಾದೇಶದ ಪ್ರಜೆ ಎಂಬುದು ದೃಢಪಟ್ಟಿದೆ. ಬಂಧಿತರಿಂದ ನಕಲಿ ಆಧಾರ್ ಕಾರ್ಡ್ಗಳು, 8 ಮೊಬೈಲ್ ಫೋನ್ಗಳು ಮತ್ತು 16 ಸಿಮ್ ಕಾರ್ಡ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಈ ಆರೋಪಿಗಳನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗುತ್ತಿದೆ.
ಕೆಂಪುಕೋಟೆ ಹಾಗೂ ಧಾರ್ಮಿಕ ಕೇಂದ್ರಗಳೇ ಟಾರ್ಗೆಟ್
ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮತ್ತು ಚಾಂದಿನಿ ಚೌಕ್ನ ಪ್ರಮುಖ ದೇವಾಲಯ ಸೇರಿದಂತೆ ದೇಶದ ಪ್ರಸಿದ್ಧ ಧಾರ್ಮಿಕ ಸ್ಥಳಗಳ ಮೇಲೆ ಐಇಡಿ (IED) ಸ್ಫೋಟ ನಡೆಸಲು ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆ ಯೋಜಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿದ್ದವು. ಫೆಬ್ರವರಿ 6 ರಂದು ಪಾಕಿಸ್ತಾನದ ಇಸ್ಲಾಮಾಬಾದ್ನ ಮಸೀದಿಯೊಂದರಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಈ ಸಂಚು ರೂಪಿಸಲಾಗಿತ್ತು ಎಂದೂ ಹೇಳಲಾಗಿತ್ತು.
ಕಳೆದ ವರ್ಷ ನವೆಂಬರ್ 10 ರಂದು ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದಿದ್ದ ಕಾರು ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದರು. ಆ ಸ್ಫೋಟದಲ್ಲಿ ಫರೀದಾಬಾದ್ನ ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಉಮರ್ ಮೊಹಮ್ಮದ್ ಭಾಗಿಯಾಗಿದ್ದ. ಸಂಚು ರೂಪಿಸುವಲ್ಲಿ ಹಲವು ವೈದ್ಯರ ಪಾತ್ರವಿದ್ದದ್ದು ಬಯಲಾಗಿತ್ತು. ಈಗ ಬಂಧಿತರಾಗಿರುವ ಈ ಹೊಸ ಮಾಡ್ಯೂಲ್ ಕೂಡ ಅಂತಹದ್ದೇ ಭೀಕರ ದಾಳಿಯನ್ನು ನಡೆಸಲು ಯೋಜಿಸಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಸದ್ಯ ಭದ್ರತಾ ಸಂಸ್ಥೆಗಳು ತನಿಖೆ ತೀವ್ರಗೊಳಿಸಿದ್ದು, ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ತಾಯಿ ಅಗಲಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್ನಿಂದ ರಕ್ಷಣೆ



















