ಬೆಂಗಳೂರು : ಅಕ್ರಮವಾಗಿ ವಾಸಿಸುತ್ತಿದ್ದ ಬಾಂಗ್ಲಾದೇಶ ಮೂಲದ ಪ್ರಜೆಗಳ ಅಡಗು ತಾಣಗಳ ಮೇಲೆ ಬೆಂಗಳೂರು ನಗರ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆ ನಡೆಸಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ನೀಡಿದ್ದಾರೆ.
ಆಯುಕ್ತರ ನಿರ್ದೇಶನದ ಮೇರೆಗೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಗರದ ಹಲವು ಭಾಗಗಳಲ್ಲಿ ಒಂದೇ ದಿನ ಸಮನ್ವಯಿತ ದಾಳಿ ನಡೆಯಿತು. ಸಾರ್ವಜನಿಕರಿಂದ ಲಭಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ರಾಮಮೂರ್ತಿ ನಗರ, ಯಲಹಂಕ ಹಾಗೂ ಬಾಗಲೂರು ಠಾಣಾ ವ್ಯಾಪ್ತಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿತ್ತು. ವಿಶೇಷವಾಗಿ ಬೆಲ್ಲಹಳ್ಳಿ ಗಾರ್ಬೆಜ್ ಪಾಯಿಂಟ್ ಪ್ರದೇಶದಲ್ಲಿ ನಡೆಸಿದ ದಾಳಿಯ ವೇಳೆ ಅನುಮಾನಾಸ್ಪದವಾಗಿ ವಾಸಿಸುತ್ತಿದ್ದವರನ್ನು ಪೊಲೀಸರು ವಿಚಾರಣೆಗೊಳಪಡಿಸಿದರು.
ಪ್ರಾಥಮಿಕ ತನಿಖೆಯಲ್ಲಿ ಸುಮಾರು 20 ಮಂದಿ ತಾವು ಬಾಂಗ್ಲಾದೇಶ ಮೂಲದವರಾಗಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗತ್ಯ ದಾಖಲೆಗಳ ಕೊರತೆ ಹಿನ್ನೆಲೆ ಅವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಈ ಸಂಬಂಧ ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ವಲಸಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ನಗರದಲ್ಲಿ ಇಂತಹ ಅಕ್ರಮ ವಾಸಸ್ಥಳಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂಓದಿ : ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್ ಮಿಸ್!



















