ಬೆಂಗಳೂರು | ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ವಾಸಿಸುವ ಬಡ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಮಕ್ಕಳಿಗೆ ನೀಡಲಾಗುತ್ತಿದ್ದ ಶೈಕ್ಷಣಿಕ ಶುಲ್ಕ ಮರುಪಾವತಿ ಕಳೆದ ಮೂರು ವರ್ಷಗಳಿಂದ ನಿಂತಿರುವು ಆರೋಪ ಕೇಳಿಬಂದಿದೆ. ಇದರ ಪರಿಣಾಮವಾಗಿ 2,600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.
ಜಿಬಿಎ ವತಿಯಿಂದ 1ನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗೆ ಖಾಸಗಿ ಶಾಲೆ, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಉಚಿತವಾಗಿ ಭೋಧನಾ ಶುಲ್ಕ, ನೋಂದಣಿ ಶುಲ್ಕ ಹಾಗೂ ಪರೀಕ್ಷಾ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತಿತ್ತು. ವಿಶೇಷವಾಗಿ ಖಾಸಗಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಈ ಯೋಜನೆ ಅನ್ವಯಿಸುತ್ತಿತ್ತು. ಪ್ರತಿ ವಿದ್ಯಾರ್ಥಿಗೆ ವರ್ಷಕ್ಕೆ ಗರಿಷ್ಠ ರೂ. 50,000ವರೆಗೆ ಮರುಪಾವತಿ ನೀಡಲಾಗುತ್ತಿತ್ತು. ಇದರಿಂದ ಬಡ ಕುಟುಂಬಗಳ ಮೇಲೆ ಇರುವ ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿತ್ತು.
ಮೂರು ವರ್ಷಗಳಿಂದ ಪಾವತಿ ಇಲ್ಲ..!
ಕಳೆದ ಮೂರು ವರ್ಷಗಳಿಂದ ಯಾವುದೇ ವಿಧದ ಶುಲ್ಕ ಮರುಪಾವತಿ ಮಾಡಿಲ್ಲ, ಇದರಿಂದಾಗಿ 2,600ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶುಲ್ಕ ಬಾಕಿ ಉಳಿದಿದ್ದು, ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ನಿಯಮಿತವಾಗಿ ಮರುಪಾವತಿ ಮಾಡಲಾಗುತ್ತಿತ್ತು. ಆದರೆ, ಇತ್ತೀಚಿನ ಮೂರು ವರ್ಷಗಳಿಂದ ಒಂದು ರೂಪಾಯಿಯೂ ಬಂದಿಲ್ಲ. ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಾಗಿದ್ದು, ನಮ್ಮ ಮೇಲೆ ಸಾಲದ ಭಾರ ಬಂದಿದೆ ಎಂದು ಕೆಲ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಜಿಬಿಎಯ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ‘ನಾವು ಈಗಾಗಲೇ ಹಣ ಕೊಟ್ಟಿದ್ದೇವೆ. ಆದರೆ ನಗರಪಾಲಿಕೆಗಳು ಪೋಷಕರ ಖಾತೆಗೆ ಹಣ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಶಿಕ್ಷಣದ ಗುಣಮಟ್ಟ ವೃದ್ಧಿಸುವ ಉದ್ದೇಶದಿಂದ ಆರಂಭಿಸಲಾದ ಯೋಜನೆಗೆ ಹಣಕಾಸು ತೊಂದರೆ ಎದುರಾಯಿತೇ? ಅಥವಾ ಆಡಳಿತಾತ್ಮಕ ವಿಳಂಬವೇ ಕಾರಣವೇ? ಎಂಬ ಪ್ರಶ್ನೆಗಳು ಕೂಡ ಉದ್ಭವಿಸಿವೆ.
ಬಡ ಕುಟುಂಬಗಳ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಬಾಕಿ ಇರುವ ಮರುಪಾವತಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಸರ್ಕಾರ ಹಾಗೂ ಜಿಬಿಎ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬರುತ್ತಿದೆ.
ಇದನ್ನೂ ಓದಿ : ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ



















