ದೊಡ್ಡಬಳ್ಳಾಪುರ : ಹುಟ್ಟುಹಬ್ಬ ಆಚರಿಸಲು ಬಿಯರ್ ಕುಡಿಯಲು ಹಣವಿಲ್ಲವೆಂದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯನ್ನು ದರೋಡೆ ಮಾಡಿದ ಗ್ಯಾಂಗ್ ಅನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಇದೇ ತಿಂಗಳ 11ರಂದು ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ದೊಡ್ಡಬಳ್ಳಾಪುರದ ಗೀತಂ ಕಾಲೇಜು ಸಮೀಪ ನಡೆದಿದೆ. ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಹಾಗೂ ಮುನೇಗೌಡ ಎಂದು ಗುರುತಿಸಲಾಗಿದೆ. ಇವರಲ್ಲಿ ಆನಂದನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಂಠಪೂರ್ತಿ ಮದ್ಯಪಾನ ಮಾಡಲು ಹಣ ಬೇಕೆಂದು ಗ್ಯಾಂಗ್ ದರೋಡೆಗೆ ಇಳಿದಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ ವೇಳೆ ಹಸಿವು ತೀರಿಸಿಕೊಳ್ಳಲು ಮ್ಯಾಗಿ ತಿನ್ನಲು ಬಂದಿದ್ದ ವ್ಯಕ್ತಿಯನ್ನು ಆರೋಪಿಗಳು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಬಳಿಕ ಆತನ ಜೇಬಿನಲ್ಲಿದ್ದ ನಗದು ಹಣದ ಜೊತೆಗೆ ಫೋನ್ಪೇ ಖಾತೆಯಲ್ಲಿದ್ದ ಹಣವನ್ನೂ ವರ್ಗಾವಣೆ ಮಾಡಿಸಿಕೊಂಡು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಹಲ್ಲೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದು, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಐದು ಮಂದಿಯನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ



















