ನವದೆಹಲಿ : ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಅಧಿಕೃತವಾಗಿ ಪ್ರಕಟಿಸಿದೆ. ನವದೆಹಲಿಯಲ್ಲಿ ಇಂದು ನಡೆದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು, ಪಂಚರಾಜ್ಯಗಳ ಚುನಾವಣಾ ದಿನಾಂಕಗಳನ್ನು ಘೋಷಿಸಿದ್ದು, ಐದೂ ರಾಜ್ಯಗಳಲ್ಲಿ ಇಂದಿನಿಂದಲೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.
ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 9 ರಿಂದ ವಿವಿಧ ಹಂತಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಲಿದೆ. ದೊಡ್ಡ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಸುಸೂತ್ರ ಮತದಾನಕ್ಕಾಗಿ 2 ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಲಾಗಿದೆ. ಏಪ್ರಿಲ್ 23 ಮತ್ತು 29ರಂದು ಇಲ್ಲಿ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಏಪ್ರಿಲ್ 23ರಂದು, ಕೇರಳದಲ್ಲಿ ಏಪ್ರಿಲ್ 9ರಂದು, ಅಸ್ಸಾಂನಲ್ಲಿ ಏಪ್ರಿಲ್ 9, ಪುದುಚೇರಿಯಲ್ಲೂ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಎಲ್ಲ ರಾಜ್ಯಗಳ ಫಲಿತಾಂಶ ಮೇ 4ರಂದು ಹೊರಬೀಳಲಿದೆ. ಕರ್ನಾಟಕದಲ್ಲಿ ಏ.9ರಂದು ಎರಡು ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಇದರ ಫಲಿತಾಂಶವೂ ಮೇ 4ರಂದೇ ಪ್ರಕಟವಾಗಲಿದೆ.
ಒಟ್ಟಾರೆಯಾಗಿ ಈ ಚುನಾವಣೆಗಳಲ್ಲಿ17.4 ಕೋಟಿ ಜನರು ಹಕ್ಕು ಚಲಾಯಿಸಲಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ. ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಸ್ಸಾಂನಲ್ಲಿ ಸಹ ಹಂತ ಹಂತವಾಗಿ ಮತದಾನ ನಡೆಯಲಿದ್ದು, ಎಲ್ಲಾ ರಾಜ್ಯಗಳ ಚುನಾವಣಾ ಕಣ ಈಗಾಗಲೇ ರಂಗೇರಿದೆ.
ಮತದಾನದ ಪ್ರಕ್ರಿಯೆಯು ಏಪ್ರಿಲ್ ತಿಂಗಳ ಪೂರ್ತಿ ವಿವಿಧ ದಿನಾಂಕಗಳಂದು ನಡೆಯಲಿದ್ದು, ಅಂತಿಮವಾಗಿ ಮೇ 4 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಇಂದಿನ ಘೋಷಣೆಯ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದ್ದು, ಅಭ್ಯರ್ಥಿಗಳ ಆಯ್ಕೆ ಮತ್ತು ಮೈತ್ರಿ ಮಾತುಕತೆಗಳು ಅಂತಿಮ ಹಂತಕ್ಕೆ ತಲುಪಿವೆ. ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣಾ ಆಯೋಗವು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಇದನ್ನೂ ಓದಿ : ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ



















