ಬೆಂಗಳೂರು : ಕಿಡ್ನಾಪ್ ಗ್ಯಾಂಗೊಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಎಂಬ ಅನುಮಾನ ವ್ಯಕ್ತವಾಗಿದ್ದು, ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಮಕ್ಕಳನ್ನೇ ಈ ಗ್ಯಾಂಗ್ ಟಾರ್ಗೆಟ್ ಮಾಡಿ ಅಪಹರಿಸಲು ಯತ್ನಿಸುತ್ತಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
ಹೌದು.. ಇತ್ತೀಚೆಗೆ ಬೆಂಗಳೂರಿನ ಬನಶಂಕರಿಯಲ್ಲಿ ಸಾಧು-ಸಂತರ ವೇಷದಲ್ಲಿ ಬಂದ ಗ್ಯಾಂಗ್, ಮಕ್ಕಳನ್ನು ಕಿಡ್ನಾಪ್ ಮಾಡಲು ಮುಂದಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
ವೈರಲ್ ವಿಡಿಯೋದ ಪ್ರಕಾರ ಕಳೆದ ಮಾ. 30ರಂದು ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಒಂದು ಕಾರು ಹಿಂಬಾಲಿಸಿಕೊಂಡು ಬಂದಿದೆ. ಬೊಲೆರೋ ಕಾರಿನಲ್ಲಿ ಬಂದಿದ್ದ ನಾಲ್ಕೈದು ಜನರ ತಂಡ ಸಾಧುಗಳ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಮನೆ ಒಳಗೆ ಹೋಗುತ್ತಿದ್ದಂತೆ ಆಕೆಯನ್ನು ಕರೆದಿದ್ದು, ಅನುಮಾನಗೊಂಡ ವಿದ್ಯಾರ್ಥಿನಿ ತಕ್ಷಣ ತನ್ನ ತಂದೆಯನ್ನು ಕರೆದಿದ್ದಾಳೆ. ಬಳಿಕ ಯುವತಿಯ ತಾಯಿಯನ್ನು ಗಮನಿಸಿದ ತಂಡ ಸ್ಥಳದಿಂದ ಪರಾರಿಯಾಗಿದೆ ಎನ್ನಲಾಗಿದೆ.
ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪೋಷಕರು ಈಗಾಗಲೇ ಈ ಬಗ್ಗೆ ಪೊಲೀಸರ ಗಮನಕ್ಕೂ ತಂದಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಇನ್ನಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ. ಘಟನೆ ಹಿನ್ನೆಲೆ ಪೋಷಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು!


















