ನವದೆಹಲಿ : ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿದ್ದಕ್ಕೆ ಆಕ್ರೋಶಗೊಂಡ ಪ್ರತಿಭಟನಾಕಾರರು 7 ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಘಟನೆಯನ್ನು “ಯೋಜಿತ ಮತ್ತು ಪ್ರೇರಿತ” ಎಂದು ಕರೆದಿರುವ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಬಂಗಾಳವು ದೇಶದ “ಅತ್ಯಂತ ಧ್ರುವೀಕೃತ ರಾಜ್ಯ” ಎಂದು ಕಿಡಿಕಾರಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಏಳು ನ್ಯಾಯಾಂಗ ಅಧಿಕಾರಿಗಳನ್ನು ಮಾಲ್ಡಾದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3:30 ಗಂಟೆಗೆ ಗ್ರಾಮಸ್ಥರ ಗುಂಪೊಂದು ಘೇರಾವ್ ಹಾಕಿದ್ದಲ್ಲದೆ, ಅವರನ್ನು ಒತ್ತೆಯಾಳಾಗಿ ಇರಿಸಿಕೊಂಡಿತ್ತು. ಅಧಿಕಾರಿಗಳನ್ನು ಸುಮಾರು 9 ಗಂಟೆಗಳ ಕಾಲ ಅಕ್ರಮ ಬಂಧನದಲ್ಲಿಡಲಾಗಿತ್ತು. ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಭಾರಿ ಪ್ರಮಾಣದ ಪೊಲೀಸ್ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿ ಅಧಿಕಾರಿಗಳನ್ನು ರಕ್ಷಿಸಿದವು. ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಪ್ರತಿಭಟನಾಕಾರರು ನ್ಯಾಯಾಂಗ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಾರಿನ ಗಾಜುಗಳು ಪುಡಿಯಾಗಿವೆ.
ಬೆಳಗಿನ ಜಾವ 2 ಗಂಟೆಯವರೆಗೆ ನಿಗಾ ವಹಿಸಿದ್ದ ಸಿಜೆಐ
ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯದ ಬಗ್ಗೆ ತೀವ್ರವಾಗಿ ಕಿಡಿಕಾರಿದರು. “ನಾನು ಸ್ವತಃ ಮಧ್ಯರಾತ್ರಿ 2 ಗಂಟೆಯವರೆಗೆ ಪರಿಸ್ಥಿತಿಯನ್ನು ಗಮನಿಸುತ್ತಿದ್ದೆ. ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಡಿಜಿಪಿ ಮತ್ತು ಗೃಹ ಕಾರ್ಯದರ್ಶಿಗೆ ಕರೆ ಮಾಡಿದ ನಂತರವಷ್ಟೇ ಸಹಾಯ ತಲುಪಿತು. ಇದು ಕೇವಲ ಒಂದು ಸಾಮಾನ್ಯ ಘಟನೆಯಲ್ಲ, ಬದಲಾಗಿ ನ್ಯಾಯಾಂಗ ಅಧಿಕಾರಿಗಳನ್ನು ಬೆದರಿಸುವ ಮತ್ತು ಅವರ ಮನೋಬಲವನ್ನು ಕುಗ್ಗಿಸುವ ಸಂಘಟಿತ ಪ್ರಯತ್ನವಾಗಿದೆ,” ಎಂದು ಅವರು ಕಿಡಿಕಾರಿದರು.
ಸಿಬಿಐ ಅಥವಾ ಎನ್ಐಎ ತನಿಖೆಗೆ ಆದೇಶ
ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ವಿಫಲವಾದ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು “ಕರ್ತವ್ಯ ಲೋಪ” ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ಘಟನೆಯ ಬಗ್ಗೆ ತನಿಖೆ ನಡೆಸಲು ಕೇಂದ್ರ ತನಿಖಾ ದಳ (CBI) ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (NIA) ನೇಮಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಈ ತನಿಖೆಯನ್ನು ನ್ಯಾಯಾಲಯವೇ ನೇರವಾಗಿ ಮೇಲ್ವಿಚಾರಣೆ ಮಾಡಲಿದೆ ಎಂದು ತಿಳಿಸಲಾಗಿದೆ.
ಪ.ಬಂಗಾಳದ ಅಡ್ವೊಕೇಟ್ ಜನರಲ್ ಅವರು ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ವಾದಿಸಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, “ದುರದೃಷ್ಟವಶಾತ್ ನಿಮ್ಮ ರಾಜ್ಯದಲ್ಲಿ ಪ್ರತಿಯೊಬ್ಬರೂ ರಾಜಕೀಯ ಭಾಷೆಯನ್ನೇ ಮಾತನಾಡುತ್ತಾರೆ. ಇಲ್ಲಿನ ದುಷ್ಕರ್ಮಿಗಳು ಯಾರು ಎಂಬುದು ನಮಗೆ ತಿಳಿಯದಷ್ಟು ನಾವು ಅಜ್ಞಾನಿಗಳಲ್ಲ,” ಎಂದು ಖಾರವಾಗಿ ಉತ್ತರಿಸಿದರು. ಇನ್ನು ಮುಂದೆ ವಿಚಾರಣೆ ನಡೆಯುವ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಬೇಕು ಮತ್ತು ಅಧಿಕಾರಿಗಳ ರಕ್ಷಣೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಮಧ್ಯೆ, ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಚುನಾವಣೆ ನಡೆಯುತ್ತಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಈಗ ರಾಜ್ಯ ಸರ್ಕಾರದ ಕೈಯಲ್ಲಿಲ್ಲ, ಅದು ಚುನಾವಣಾ ಆಯೋಗದ ಅಡಿಯಲ್ಲಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ : ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್!


















