ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷದ ನಡುವೆ ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರು ಪ್ರಾಣ ಕಳೆದುಕೊಳ್ಳುತ್ತಿರುವುದರ ಬಗ್ಗೆ ಭಾರತ ತೀವ್ರ ಆತಂಕ ವ್ಯಕ್ತಪಡಿಸಿದೆ. ಬ್ರಿಟನ್ ಆಯೋಜಿಸಿದ್ದ 60ಕ್ಕೂ ಹೆಚ್ಚು ರಾಷ್ಟ್ರಗಳ ಬಹುಪಕ್ಷೀಯ ಸಭೆಯಲ್ಲಿ ಪಾಲ್ಗೊಂಡ ಭಾರತ, ಈ ವಿವಾದಿತ ಜಲಸಂಧಿಯಲ್ಲಿ ನಾಗರಿಕರನ್ನು ಕಳೆದುಕೊಂಡ ಏಕೈಕ ರಾಷ್ಟ್ರ ಭಾರತವಾಗಿದೆ ಎಂದು ಹೇಳುವ ಮೂಲಕ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸುವಂತೆ ಆಗ್ರಹಿಸಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ವರ್ಚುವಲ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಮಾತನಾಡುತ್ತಾ, ಪಶ್ಚಿಮ ಏಷ್ಯಾದ ಅಸ್ಥಿರತೆಯು ಭಾರತದ ಇಂಧನ ಭದ್ರತೆಯ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದ್ದಾರೆ. ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿದ್ದ ವಿದೇಶಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇದುವರೆಗೆ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾಗತಿಕ ಇಂಧನ ಪೂರೈಕೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ಸುರಕ್ಷಿತ ಮತ್ತು ಮುಕ್ತ ಸಂಚಾರ ಅತ್ಯಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಘರ್ಷಕ್ಕೆ ರಾಜತಾಂತ್ರಿಕತೆಯೇ ಪರಿಹಾರ
ಯುದ್ಧದಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿರುವುದರ ಬಗ್ಗೆಯೂ ಪ್ರಸ್ತಾಪಿಸಿರುವ ಭಾರತ, ಉದ್ವಿಗ್ನತೆಯನ್ನು ಕಡಿಮೆ ಮಾಡಲು ರಾಜತಾಂತ್ರಿಕತೆ ಮತ್ತು ಮಾತುಕತೆಯೇ ಏಕೈಕ ಮಾರ್ಗ ಎಂದು ಪುನರುಚ್ಚರಿಸಿದೆ. “ಇರಾನ್ ಮತ್ತು ಇತರ ದೇಶಗಳ ನಡುವಿನ ಈ ಸಂಘರ್ಷವನ್ನು ಮಾತುಕತೆಯ ಮೂಲಕ ಅಂತ್ಯಗೊಳಿಸಬೇಕು. ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿಪಡಿಸುವುದು ಜಾಗತಿಕ ಆರ್ಥಿಕತೆಗೆ ಮಾರಕ” ಎಂದು ಮಿಸ್ರಿ ತಿಳಿಸಿದ್ದಾರೆ. ಸುಮಾರು 1 ಕೋಟಿ ಭಾರತೀಯರು ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವುದು ಭಾರತದ ಕಳವಳಕ್ಕೆ ಮುಖ್ಯ ಕಾರಣ ಎಂದು ಹೇಳಲಾಗಿದೆ.
ಭಾರತೀಯರ ರಕ್ಷಣೆ
ಕೊಲ್ಲಿ ರಾಷ್ಟ್ರಗಳಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ. ಯುದ್ಧ ಪೀಡಿತ ಪ್ರದೇಶಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ಹೊರತರಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಈಗಾಗಲೇ 204 ಭಾರತೀಯರನ್ನು ಇರಾನ್ನಿಂದ ಅಜೆರ್ಬೈಜಾನ್ ಭೂಗಡಿಯ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಈ ಪ್ರಕ್ರಿಯೆಗೆ ಸಹಕರಿಸಿದ ಅಜೆರ್ಬೈಜಾನ್ ಸರ್ಕಾರಕ್ಕೆ ಭಾರತ ಧನ್ಯವಾದ ಅರ್ಪಿಸಿದೆ. ಸಂಘರ್ಷದಲ್ಲಿ ಈವರೆಗೆ ಒಟ್ಟು ಎಂಟು ಭಾರತೀಯರು ಮೃತಪಟ್ಟಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬಂಗಾಳದಲ್ಲಿ ಜಡ್ಜ್ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ



















