ಧಾರವಾಡ : ಪ್ರಸ್ತುತ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿರುವುದ್ದಲ್ಲದೇ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಮತ್ತೊಂದು ಘಟನೆ ಬಯಲಿಗೆ ಬಂದಿದೆ. ಸುಮಾರು ಎರಡು ವರ್ಷಗಳ ಹಿಂದೆ ಯುವತಿಯನ್ನು ಮುನ್ನಾ ಎಂಬ ಯುವಕ ಕರೆದುಕೊಂಡು ಹೋಗಿದ್ದಲ್ಲದೇ ಆಕೆಯ ತಾಯಿಯ ಬಳಿ 10 ಲಕ್ಷ ರೂ. ಹಣನೂ ಪಡೆದಿದ್ದ. ಆದರೆ ಇಲ್ಲಿಯವರೆಗೂ ಯುವತಿಯೂ ಇಲ್ಲ, ಆರೋಪಿಯು ಇಲ್ಲ, ಇತ್ತ ಹಣನೂ ಇಲ್ಲ ಅಂತ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ.
ಈ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ ಯುವತಿಯ ಮನೆ ಎದುರಿನ ವಕೀಲರ ಬಳಿ ಕೆಲಸ ಮಾಡುತ್ತಿದ್ದ ಹಾಗೂ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದನೆಂದು ತಿಳಿದುಬಂದಿದೆ. ಯುವತಿಯ ತಾಯಿಯಿಂದ ಮನೆ ಕೊಡಿಸುವುದಾಗಿ ಹೇಳಿ ಸುಮಾರು 10 ಲಕ್ಷ ರೂಪಾಯಿ ಹಣ ಪಡೆದಿದ್ದಲ್ಲದೇ ಯುವತಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮುನ್ನಾಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ದೆಹಲಿಯಲ್ಲಿ ಅವನ ಮೇಲೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ ಎನ್ನಲಾಗಿದೆ.
ಈ ಪ್ರಕರಣ ಸಂಬಂಧ ಯುವತಿಯ ತಾಯಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದು, ತಮ್ಮ ಮಗಳನ್ನು ಪತ್ತೆ ಹಚ್ಚಿ ಕೊಡಬೇಕು ಹಾಗೂ ಹಣವನ್ನು ವಾಪಾಸ್ ಮರಳಿಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಭೇಟಿ ಮಾಡಿ ಸಹಾಯ ಕೋರಿದ್ದಾರೆ.
ಎರಡು ವರ್ಷಗಳಾದರೂ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣದಿರುವುದರಿಂದ, ಪೊಲೀಸರ ನಿರ್ಲಕ್ಷ್ಯ ಧೋರಣೆ ವಿರುದ್ಧ ಯುವತಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಅವಳಿ ನಗರಗಳಲ್ಲಿ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಇಂತಹ ಘಟನೆಗಳು ನಡೆಯುತ್ತಿವೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವಂತೆ ಶ್ರೀರಾಮ ಸೇನೆ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸುತ್ತಿದ್ದಾರೆ.
ಇದನ್ನೂ ಓದಿ : ಮಡಿಕೇರಿ ಬೆನ್ನಲ್ಲೇ ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಮತ್ತೋರ್ವ ಯುವತಿ ನಾಪತ್ತೆ!


















